ನಿಗಧಿತ ಅವಧಿಯಲ್ಲಿ ಕಾಮಗಾರಿ ಪ್ರಗತಿ ಸಾಧಿಸಿ ಮತ್ತು ಫಲಾನುಭವಿಗಳ ಆಯ್ಕೆ ಮಾಡಿ :ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನ
ಧಾರವಾಡ:ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ವೈಯಕ್ತಿಕ ಹಾಗೂ ಸಾಮುದಾಯಿಕ ಅಭಿವೃದ್ಧಿಗೆ ಉಪಯೋಜನೆಯಡಿ ಮೀಸಲಾಗಿರುವ ಅನುದಾನವನ್ನು ಕಾರಣ ಹೇಳದೆ ನಿಗದಿತ ಅವಧಿಯಲ್ಲಿ ಫಲಾನುಭವಿಗಳ ಆಯ್ಕೆ ಮತ್ತು ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನ ನೀಡಿದರು.
ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ 2019-20 ನೇ ಸಾಲಿನ ಎಸ್ಸಿಪಿ ಮತ್ತು ಟಿಎಸ್ಪಿ ಉಪಯೋಜನೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿನ ಆಗಸ್ಟ್-2019ರ ವರೆಗೆ ಆಗಿರುವ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಕೆಲವು ಇಲಾಖೆಗಳು ನಿಗಧಿತ ಅವಧಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಪೂರ್ಣ ಗುರಿಸಾಧಿಸಿವೆ. ಆದರೆ ಉಳಿದ ಇಲಾಖೆಗಳು ಪ್ರಗತಿ ಸಾಧಿಸುವಲ್ಲಿ ಹಿಂದುಳಿದಿವೆ.
ಎಸ್ಸಿಪಿ ಮತ್ತು ಟಿಎಸ್ಪಿ ಉಪಯೋಜನೆ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದಾಗಿರಬೇಕು ಮತ್ತು ಕಾಮಗಾರಿಗಳನ್ನು ಜೀಯೋ ಟ್ಯಾಗ್ ಮಾಡಿ ಛಾಯಾಚಿತ್ರದೊಂದಿಗೆ ನೊಡಲ್ ಇಲಾಖೆಯಾದ ಸಮಾಜ ಕಲ್ಯಾಣ ಇಲಾಖೆಗೆ ತಪ್ಪದೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ವ್ಯಕ್ತಿಗತ ಅಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮತ್ತು ಆಯ್ಕೆಯಾದವರಿಗೆ ಆದೇಶಪತ್ರದ ಹಂಚಿಕೆ ಬಾಕಿ ಉಳಿದಿದೆ. ಇಲಾಖಾ ಅಧಿಕಾರಿಗಳು ಖುದ್ದು ಮುತುವರ್ಜಿವಹಿಸಿ, ಶಾಸಕರ ಅಧ್ಯಕ್ಷತೆಯ ಸಭೆ ಸಂಯೋಜಿಸಿ, ಫಲಾನುಭವಿಗಳ ಆಯ್ಕೆ ಪಟ್ಟಿಗೆ ಅನುಮೊದನೆ ಪಡೆಯಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರಗೊಳಿಸಲಾಗುವುದು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರಿ ಅವರು ಮಾತನಾಡಿ, ಎಸ್ಸಿಪಿ ಮತ್ತು ಟಿಎಸ್ಪಿ ಉಪಯೋಜನೆಯಡಿ ಕಾರ್ಯಕ್ರಮಗಳಿಗಾಗಿ ಕೇಂದ್ರ ವಲಯ ಮತ್ತು ರಾಜ್ಯ ವಲಯ ಸೇರಿ ಜಿಲ್ಲೆಗೆ ಒಟ್ಟು 20578.63 ಲಕ್ಷ ರೂ.ಗಳ ಆರ್ಥಿಕ ಗುರಿ ಹೊಂದಲಾಗಿತ್ತು. ಆಗಸ್ಟ್ ಮಾಸಾಂತ್ಯದವರೆಗೆ 10102.84 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಶೇ 45% ರಷ್ಟು ಪ್ರಗತಿ ಸಾಧಿಸಲಾಗಿದೆ. ಉಪಯೋಜನೆಯಡಿ ಕೈಗೊಳ್ಳುವ ಕಾರ್ಯಕ್ರಮಗಳ ಪ್ರಗತಿ ಕುರಿತು ಛಾಯಾಚಿತ್ರಗಳೊಂದಿಗೆ ವಿವರವಾದ ವರದಿಯನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಪ್ರತಿ ತಿಂಗಳು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕೆಂದು ಅವರು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ ಮಾತನಾಡಿ, ಎಸ್ಸಿಪಿ ಮತ್ತು ಟಿಎಸ್ಪಿ ಉಪಯೋಜನೆಯಡಿ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿಗಧಿತ ಗುರಿಯನ್ವಯ ಪ್ರಗತಿಯಾಗಿದೆ. ಕಾಮಗಾರಿಗಳಿಗೆ ಟೆಂಡರ್ ಕೊಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಪಂಚಾಯತ ಯೋಜನಾ ನಿರ್ದೇಶಕ ದೀಪಕ ಮಡಿವಾಳರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವ್ಹಿ.ಬಿ.ಯಮಕನಮರಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಪರಮೇಶ್ವರ ನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ.ರಾಮಚಂದ್ರ ಮಡಿವಾಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ, ಪ್ರವಾಸೊದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ರೆಹಮತ ನದಾಫ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ ವಿ.ವಿ. ಹಾಗೂ ಕ.ವಿ.ವಿ., ಕಾನೂನು ವಿಶ್ವವಿದ್ಯಾಲಯದ ಅಧಿಕಾರಿಗಳು ಭಾಗವಹಿಸಿ, ಇಲಾಖಾವಾರು ಸಾಧಿಸಿದ ಕಾರ್ಯಕ್ರಮಗಳ ಪ್ರಗತಿ ವರದಿ ನೀಡಿದರು.