ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಮಮತಾ ಬ್ಯಾನರ್ಜಿ ಸ್ಪರ್ಧೆ ಸಾಧ್ಯತೆ
ಕೋಲ್ಕತ್ತ: ‘ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭವಾನಿಪುರ ಶಾಸಕ ಶೋಭನ್ದೇವ್ ಚಟ್ಟೋಪಾಧ್ಯಾಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ’ ಎಂದು ಟಿಎಂಸಿ ಮೂಲಗಳು ಹೇಳಿವೆ.
ಈ ಬಾರಿಯ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು. ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯ ಬೇಕಾದರೆ, ಆರು ತಿಂಗಳೊಳಗೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಶೋಭನ್ದೇವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಲಿದ್ದಾರೆ.
‘ಈ ಬಗ್ಗೆ ಪ್ರತಿಕ್ರಿಯಿಸಿದ ಚಟ್ಟೋಪಾಧ್ಯಾಯ ಅವರು,‘ ಇದು ಪಕ್ಷದ ನಿರ್ಧಾರವಾಗಿದೆ. ನಾನು ಅದನ್ನು ಸಂತಸದಿಂದ ಪಾಲಿಸುತ್ತೇನೆ. ಭವಾನಿಪುರ ಕ್ಷೇತ್ರದ ಶಾಸಕ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲಿದ್ದೇನೆ’ ಎಂದು ಅವರು ಹೇಳಿದರು.