ಹುಬ್ಬಳ್ಳಿ:ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾರ್ವಜನಿಕರ ಬೇಡಿಕೆಗನುಗುಣವಾಗಿ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ಪೂರೈಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತದ ಬಳಿ ಇರುವ ಕರ್ನಾಟಕ ಮೆಡಿಕಲ್ ಶಾಪ್, ಕಾಮಧೇನು ಮೆಡಿಕಲ್ ಸ್ಟೋರ್ ಸೇರಿದಂತೆ ವಿವಿಧ ಔಷಧ ಅಂಗಡಿಗಳ ಮೇಲೆ ಇಂದು ದಾಳಿ ಮಾಡಿ, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು , ನಿಗದಿತ ಎಂ.ಆರ್.ಪಿ.ದರದಲ್ಲಿ ಪೂರೈಸಬೇಕು ಎಂದು ಸೂಚಿಸಲಾಯಿತು. ಬೇಡಿಕೆ ಆಧರಿಸಿ ಸಾಮಗ್ರಿಗಳ ದಾಸ್ತಾನು ಸಂಗ್ರಹ ಇಟ್ಟುಕೊಳ್ಳಲು ನಿರ್ದೇಶನ ನೀಡಲಾಯಿತು.
ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ದಾಳಿಯ ನೇತೃತ್ವ ವಹಿಸಿದ್ದರು. ಸಹಾಯಕ ನಿರ್ದೇಶಕ ಮಂಜುನಾಥ ರೇವಣಕರ್, ಸಹಾಯಕ ಔಷಧ ನಿಯಂತ್ರಕ ಮಲ್ಲಿಕಾರ್ಜುನ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಬಿ.ಪೂಜಾರ ಮತ್ತಿತರರು ತಂಡದಲ್ಲಿ ಇದ್ದರು.