ಧಾರವಾಡ: ಪ್ರವಾಹ ಪರಿಹಾರ ವಿತರಣೆಗೆ ಮೊದಲ ಆಧ್ಯತೆ ನೀಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಅವರು ಇಂದು ಬೆಳಿಗ್ಗೆ ವಾರ್ತಾ ಭವನದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯಕ್ಕೆ ಭೇಟಿ ನೀಡಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರೊಂದಿಗೆ ಮಾತನಾಡಿ, ಹೇಳಿದರು.
ಜಿಲ್ಲೆಗೆ ಪ್ರವಾಹ ಪರಿಹಾರದ ಮೊದಲ ಕಂತವಾಗಿ ಸುಮಾರು ರೂ.6.00 ಕೋಟಿ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ ಶಾಲಾ ಕಟ್ಟಡಗಳ ದುರಸ್ತಿ, ಗ್ರಾಮೀಣ ಹಾಗೂ ಹೊಲದ ರಸ್ತೆಗಳ ದುರಸ್ತಿ ಮತ್ತು ಮನೆ ಪರಿಹಾರ ನೀಡಲಾಗುತ್ತಿದೆ. ಪ್ರವಾಹ ಹಾನಿ ಕುರಿತು ಮರುಸಮೀಕ್ಷೆ ಮಾಡಲು ಬೇಡಿಕೆ ಬಂದಿದ್ದು, ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನದ ಬೇಡಿಕೆಗಾಗಿ ಎಲ್ಲ ಇಲಾಖೆಗಳಿಂದ ಕ್ರೋಢೀಕರಿಸಿದ ಒಂದು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಮತ್ತು ಬರುವ ಬಜೆಟ್ದಲ್ಲಿ ಅಳವಡಿಸಿ ಮುಖ್ಯಮಂತ್ರಿಗಳಿಂದ ಘೋಷಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಾಸಕ ಅಮೃತ ದೇಸಾಯಿ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ ರಸ್ತೆಗಳು ಹಾಗೂ ಹೊಲಮನೆ ರಸ್ತೆಗಳು ಹಾಳಾಗಿದ್ದು, ರೈತರಿಗೆ ಕೃಷಿ ಚಟುವಟಿಕೆಗಳನ್ನು ಮಾಡಲು ತುಂಬಾ ತೊಂದರೆಯಾಗಿದ್ದು, ಆದಷ್ಟು ಬೇಗ ಸಚಿವರು ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಸಮಸ್ಯೆ ಪರಿಹರಿಸಬೇಕೆಂದು ಹೇಳಿದರು.
ಸಚಿವರ ಭೇಟಿ ತಂಡದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವಿಜಯಲಕ್ಷ್ಮಿ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಚನ್ನಮ್ಮ ಶಿವನಗೌಡರ್, ನಿಂಗಪ್ಪ ಘಾಟೀನ್, ಕಲ್ಲಪ್ಪ ಪುಡಕಲಕಟ್ಟಿ, ಜಿಲ್ಲಾ ಪಂಚಾಯತ್ ಇತರ ಸದಸ್ಯರು ಪಾಲ್ಗೊಂಡು, ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.