ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ.ಗಳ ವೆಚ್ಚದಲ್ಲಿ ಮಿಲಿಟರಿ ಶಾಲೆ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 26th January 2022, 8:06 PM | State News |

ಬೆಂಗಳೂರು : ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್  ಮಿಲಿಟರಿ  ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ  ಸ್ಮರಣೋತ್ಸವ ಅಂಗವಾಗಿ  ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡುತ್ತಿದ್ದರು.  

ಈ  ಉದ್ದೇಶಕ್ಕಾಗಿ    55 ಕೋಟಿ ರೂ.ಗಳನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ.  ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಪರಿಶೀಲನಾ ಕಾರ್ಯವೂ ನಡೆದಿದ್ದು, ರಕ್ಷಣಾ ಇಲಾಖೆ ಅದನ್ನು ಬಹುತೇಕವಾಗಿ ಮಿಲಿಟರಿ ಶಾಲೆಯಾಗಿ ಪರಿವರ್ತನೆ ಮಾಡಲಿದೆ. ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು 100 ಎಕರೆ ಪ್ರದೇಶದಲ್ಲಿ ಮಾಡಲಾಗುತ್ತಿದೆ ಎಂದರು. 

ರಾಯಣ್ಣ ಹುತಾತ್ಮರಾದ  ನಂದಗಡದಲ್ಲಿ ಅವರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುವುದು. ಅವರ ಹುಟ್ಟೂರು ಸಂಗೊಳ್ಳಿಯಲ್ಲಿ  10 ಎಕರೆ ಜಮೀನು  ರಾಕ್ ಗಾರ್ಡನ್ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ.  ಮುಂದಿನ ಪೀಳಿಗೆಗೆ ರಾಯಣ್ಣನ ಜೀವನದ ಪರಿಚಯ ಮಾಡಿಕೊಡಲು ಈ ಸ್ಮಾರಕಗಳ ನಿರ್ಮಾಣವಾಗುತ್ತಿದೆ ಎಂದರು. 

ರಾಯಣ್ಣನ ಧ್ಯೇಯ ಜೀವಂತವಾಗಿಡಲು ಕ್ರಮ: ಸಂಗೊಳ್ಳಿ ರಾಯಣ್ಣನ ಗುಣಧರ್ಮಗಳಾದ ದೇಶಭಕ್ತಿ, ಸ್ವಾಮಿ ಭಕ್ತಿ, ನಿಷ್ಠೆ, ಧೈರ್ಯ ಶೌರ್ಯ, ಸಾಹಸ ಗುರಿಗಳನ್ನು ಪ್ರಚಲಿತ ಸಮಾಜದಲ್ಲಿ ಜೀವಂತವಾಗಿಡಲು ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ. ಅವರ ಧ್ಯೇಯವನ್ನು ಮುಂದಿಟ್ಟುಕೊಂಡು ನಮ್ಮ ಆಡಳಿತ ನಡೆಯಲಿದೆ. ಕಳೆದ ಬಾರಿ ಸರ್ಕಾರವೇ ರಾಯಣ್ಣನ ಜನ್ಮದಿನಾಚರಣೆ ಮಾಡಲು ಮನವಿ ಬಂದ ಒಂದು ಗಂಟೆಯಲ್ಲಿ ಆದೇಶ ಹೊರಡಿಸಲಾಯಿತು ಎಂದರು.  

*ಶಾಲಾ ಕಾಲೇಜುಗಳಲ್ಲಿ ಭಾವಚಿತ್ರ* ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಿಸಲು ಇಂದೇ ಆದೇಶ ಹೊರಡಿಸಲಾಗುವುದು ಎಂದು ಪ್ರಕಟಿಸಿದರು.  

*ಬೆಂಗಳೂರಿನ ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು*: ಸಂಗೊಳ್ಳಿ ರಾಯಣ್ಣನ ವಿಚಾರಧಾರೆಯನ್ನು ಪ್ರಚುರಪಡಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕರ್ನಾಟಕದಲ್ಲಿ ಸ್ವತಂತ್ರ ಹೋರಾಟಗಾರರ ದೊಡ್ಡ ಇತಿಹಾಸವಿದೆ.  ಬೆಂಗಳೂರಿನ ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಬೇಕು ಎಂಬ ಪ್ರಸ್ತಾಪವನ್ನು ಸಂಸದ ಪಿ.ಸಿ.ಮೋಹನ್ ಮಾಡಿದ್ದು  ಈ ಬಗ್ಗೆ  ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದರು. 

ನವದೆಹಲಿಯಲ್ಲಿ ರಾಯಣ್ಣನ ಪ್ರತಿಮೆ : ನವದೆಹಲಿಯಲ್ಲಿ ಕಿತ್ತೂರು  ರಾಣಿ ಚನ್ನಮ್ಮನ ಪ್ರತಿಮೆಯಿದೆ. ಚನ್ನಮ್ಮ ಇದ್ದ ಕಡೆ ರಾಯಣ್ಣ ಸಹ ಇರಬೇಕು.  ನವದೆಹಲಿಯ ಸೂಕ್ತ ಸ್ಥಳದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಸಂಬಂಧ ಪಟ್ಟವರಿಗೆ ಪತ್ರ ಬರೆಯಲಾಗಿದೆ ಎಂದರು. 

*ಬೆಳಗಾವಿಯಲ್ಲಿ ಪ್ರತಿಮೆಗಳು* ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುವರ್ಣ ಸೌಧದ ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ. ಮೂರ್ತಿ ಮಾಡುವವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಆದಷ್ಟು ಶೀಘ್ರದಲ್ಲಿ ಈ ಮೂರ್ತಿಗಳು ಸ್ಥಾಪನೆಯಾಗಲಿವೆ ಎಂದರು.

 ಅವರ ತ್ಯಾಗ, ಬಲಿದಾನ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ. ಸ್ವಾತಂತ್ರ್ಯದ ನಂತರ ಹುಟ್ಟಿರುವ ನಾವು ದೇಶ ಕಟ್ಟಲು ಆದರ್ಶ ಬದುಕನ್ನು  ಬದುಕುವ ಮೂಲಕ ದೇಶಕ್ಕೆ ಸೇವೆ ಮಾಡಬೇಕು. ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂದು ಪ್ರಶ್ನಿಸಿಕೊಳ್ಳಬೇಕಾದ ದಿನವಿದು. ನಮ್ಮ ಹಕ್ಕುಗಳನ್ನು ಅರ್ಹತೆಯಿಂದ ಪಡೆದುಕೊಳ್ಳಬೇಕು ಎಂದರು. 
ಕಾಗಿನೆಲೆ ಪೀಠದ  ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್,ಮಾಜಿ ಶಾಸಕರಾದ ವಾಟಾಳ್ ನಾಗರಾಜ್, ಮಾಜಿ ಸಚಿವ  ಹೆಚ್.ಎಂ.ರೇವಣ್ಣ  ಮೊದಲಾದವರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...