ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸಚಿವರ ಸೂಚನೆ.

Source: SO News | By Laxmi Tanaya | Published on 6th June 2023, 12:58 PM | State News | Don't Miss |

ಶಿವಮೊಗ್ಗ : ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಿಳಿಸಿದರು.
      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
        ಸಚಿವರು, ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಹೋಬಳಿವಾರು ನೀರಿನ ಸಮಸ್ಯೆ ಇರುವ ಹಳ್ಳಿಗಳ ಪಟ್ಟಿ ಮಾಡಬೇಕು. ಸಿಇಓ ಅವರು ಸಮಸ್ಯಾತ್ಮಕ ಹಳ್ಳಿಗಳ ವರದಿ ಸಿದ್ದಪಡಿಸಿ ಕುಡಿಯುವ ನೀರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
       ಜಿಲ್ಲೆಯಲ್ಲಿ 2818 ಸರ್ಕಾರಿ ಶಾಲೆಗಳಿವೆ. ಇದರಲ್ಲಿ 0 ಶಿಕ್ಷಕರಿರುವ ಶಾಲೆಗಳು ಒಟ್ಟು 136 ಇವೆ. ಸಾಗರ ತಾಲ್ಲೂಕಿನಲ್ಲೇ 52 ಶಾಲೆಯಲ್ಲಿ ಶಿಕ್ಷಕರಿಲ್ಲ. ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಈ ಕುರಿತು ಡಿಡಿಪಿಐ ಅವರು ಹೆಚ್ಚಿನ ಗಮನ ಹರಿಸಬೇಕು. ಮುಂಬರುವ ವರ್ಗಾವಣೆ ಕೌನ್ಸೆಲಿಂಗ್‍ನಲ್ಲಿ ಈ ಪ್ರದೇಶಗಳಿಗೆ ಶಿಕ್ಷಕರು ವರ್ಗಾವಣೆಯಾಗುವಂತೆ, ಇತರೆಡೆ ನಿಯೋಜನೆಗೊಂಡ ಶಿಕ್ಷಕರನ್ನು ಇಲ್ಲಿ ನಿಯೋಜಿಸುವಂತೆ ಹಾಗೂ ಅತಿಥಿ ಶಿಕ್ಷಕರನ್ನು ಇಲ್ಲಿ ನಿಯೋಜಿಸುವ ಮೂಲಕ ಇಲ್ಲಿ ಶಿಕ್ಷಕರನ್ನು ನೇಮಿಸಿ ಶಾಲೆಗಳು ನಡೆಯುವಂತೆ ನೋಡಿಕೊಳ್ಳಬೇಕು. ತಾವು ಸಹ ಸರ್ಕಾರದ ಹಂತದಲ್ಲಿ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

        ಡಿಡಿಪಿಐ ಮಾತನಾಡಿ, 167 ಪ್ರೌಢಶಾಲಾ ಶಿಕ್ಷಕರು, 1009 ಪ್ರಾಥಮಿಕ ಶಿಕ್ಷಕರ ಹುದ್ದೆ ಖಾಲಿ ಇದೆ. ಪ್ರಾಥಮಿಕ ಶಾಲೆಗೆ 1031 ಮತ್ತು ಪ್ರೌಢಶಾಲೆ 108 ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ 448 ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶಾಲೆಗಳಲ್ಲಿ ಪಠ್ಯ, ಸಮವಸ್ತ್ರ ವಿತರಣೆಯಾಗಿದೆ ಎಂದರು. 

     ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಸುಮಾರು ರೂ. 250 ಕೋಟಿ ಕಾಮಗಾರಿ ಕೈಗೊಳ್ಳಲಾಗಿದ್ದರೂ ಇದುವರೆಗೆ ಒಂದು ಹನಿ ನೀರು ಬಂದಿಲ್ಲ. ಈ ಕುರಿತು ಸಂಬಂಧಿಸಿದ ಇಂಜಿನಿಯರ್, ಅಧಿಕಾರಿಗಳ ವಿರುದ್ದ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
      ಹಾಗೂ ಅಂಬ್ಲಿಗೊಳ ಜಲಾಶಯದಲ್ಲಿ ಡೆಡ್ ಸ್ಟೋರೇಜ್‍ಗಿಂತ ಕಡಿಮೆ ನೀರು ಇದೆ. ಕುಡಿಯುವ ನೀರು ಬಿಟ್ಟು ಬೇರೆ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ. ಆದರೂ ಮುಳಗಡೆ ಕ್ಷೇತ್ರವಾದ ಸಾಗರಕ್ಕೆ ನೀರು ಕೊಡದೆ ಶಿಕಾರಿಪುರಕ್ಕೆ ನೀರು ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು. ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

    ಸಾಗರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಡಯಾಲಿಸಿಸ್ ಮಷೀನ್ ಕೆಲಸ ಮಾಡುತ್ತಿಲ್ಲ. ಅನುದಾನವಿದ್ದರೂ ಬಳಕೆ ಆಗುತ್ತಿಲ್ಲ. ಇದರಿಂದ ಬಡವರಿಗೆ ತುಂಬಾ ಅನಾನುಕೂಲವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು. ಹಾಗೂ ಜನರಿಕ್ ಮಳಿಗೆಯಲ್ಲಿ ಔಷಧಿಗಳು ಲಭ್ಯವಿಲ್ಲ ಎಂದು ದೂರಿದರು.
 ಸಚಿವರು, ಡಯಾಲಿಸಿಸ್ ಮಷೀನ್, ಜನರಿಕ್ ಔಷಧಿ ಹಾಗೂ ಜನರಿಗೆ ಏನು ತ್ವರಿತವಾಗಿ ಅವಶ್ಯಕತೆಗಳಿವೆ ಎಂಬುದರ ಕುರಿತು ಬುಧವಾರದ ಒಳಗೆ ವರದಿ ನೀಡುವಂತೆ ಡಿಹೆಚ್‍ಓರವರಿಗೆ ತಿಳಿಸಿದರು.

     ಜಿಲ್ಲಾಧಿಕಾರಿಗಳು, ಡಯಾಲಿಸಿಸ್, 108 ಆಂಬುಲೆನ್ಸ್ ಸಮಸ್ಯೆ ಇದೆ, ಜನೆರಿಕ್ ಔಷಧಿಗಳು ಬೇಡಿಕೆಗೆ ತಕ್ಕಂತೆ ಲಭ್ಯವಾಗುತ್ತಿಲ್ಲ ಹಾಗೂ ಡ್ರಗ್ ಲಾಜಿಸ್ಟಿಕ್ ಸಹ ಬೇಡಿಕೆ ಮತ್ತು ಸರಬರಾಜು ವ್ಯತ್ಯಾಸವಾಗುತ್ತಿದೆ ಎಂದರು.
     ಸಚಿವರು, ಜಿಲ್ಲೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ಕೊರತೆ ಇದೆ. ಈ ಬಗ್ಗೆ ಜನರು ಹಲವಾರು ಬಾರಿ ಅಹವಾಲು ನೀಡಿದ್ದಾರೆ. ಹೆಚ್ಚುವರಿ ಬಸ್ ಅವಶ್ಯಕತೆ ಇರುವ ಸ್ಥಳಗಳ ಹಾಗೂ ರೂಟ್ ಎಕ್ಸ್‍ಟೆನ್ಶನ್ ಬಗ್ಗೆ ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು.

     ಶಾಸಕರಾದ ಶಾರದಾ ಪೂರ್ಯಾ ನಾಯ್ಕ್ ಮಾತನಾಡಿ, ತಮ್ಮ ಕ್ಷೇತ್ರದಲ್ಲೂ ಜನರು ರೂಟ್ ಎಕ್ಸ್ಟೆನಶನ್  ಬಗ್ಗೆ ಕೇಳುತ್ತಿದ್ದಾರೆ. ಒಂದೆರಡು ಹಳ್ಳಿಗಳಿಗೆ ಬಸ್ ಹೋಗುವ ಮೂಲಕ ರೂಟ್ ಎಕ್ಸ್ಡೆನಶನ್  ಮಾಡುವಂತೆ ತಿಳಿಸಿದರು.

     ಜಿಲ್ಲಾಧಿಕಾರಿಗಳು, ಜಿಲ್ಲೆಗೆ ಸುಮಾರು 50 ಬಸ್‍ಗಳ ಅವಶ್ಯಕತೆ ಇದೆ. ಕೆಎಸ್‍ಆರ್‍ಟಿಸಿ ಡಿಸಿ ಅವರಿಂದ ಪಟ್ಟಿ ತರಿಸಿ ಹೆಚ್ಚುವರಿ ಬೇಡಿಕೆ ಇರುವ, ರೂಟ್ ಎಕ್ಸ್‍ಟೆನ್ಶನ್ ಬಗ್ಗೆ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದರು.

     ಶರಾವತಿ ಸಂತ್ರಸ್ತರು ತಮ್ಮ ವಿರುದ್ದದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನಿಗಾಗಿ ಬೆಂಗಳೂರಿಗೆ ಅಲೆಯುತ್ತಿದ್ದಾರೆ. ಅರಣ್ಯ ಕಾಯ್ದೆ ಇತರೆ ಕಾಯ್ದೆಗಳಡಿ ಸಿಲುಕಿ ಒದ್ದಾಡುತ್ತಿದ್ದು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಮಾನವೀಯತೆಯಿಂದ ಇವರನ್ನು ನಡೆಸಿಕೊಳ್ಳಬೇಕಿದೆ. ಈ ಸಮಸ್ಯೆಗೆ ಪರಿಹಾರ ಹುಡುಕಬೇಕಿದ್ದು ಅರಣ್ಯ ಮತ್ತು ಕಂದಾಯ ಇಲಾಖೆಯ ಸಹಕಾರ ಅತ್ಯಂತ ಅವಶ್ಯಕವಾಗಿದೆ ಎಂದರು.
       ಮಳೆ ಹಾನಿ ಸಂಭವಿಸಿ ಮನೆ-ಜಾನುವಾರು-ಜೀವ ಹಾನಿಯಾದಾಗ ಅಧಿಕಾರಿಗಳು ಮಹಜರು ಮಾಡುವ ಸಂದರ್ಭದಲ್ಲಿ ಮಾನವೀಯತೆ ತೋರಬೇಕು. ಹಾನಿಯನ್ನು ಸಮರ್ಪಕವಾಗಿ ನಿರ್ಣಯಿಸಿ ಸೂಕ್ತ ಪರಿಹಾರ ನೀಡಬೇಕು ಎಂದರು.

       ಕುಡಿಯುವ ನೀರು, ಮಳೆ ಅಥವಾ ಬೆಳೆ ಹಾನಿಗೆ ಸೂಕ್ತ ಪರಿಹಾರ, ಶಾಲಾ ಮಕ್ಕಳ ಕೊಠಡಿಗಳ ನಿರ್ಮಾಣಕ್ಕೆ ಮೊದಲ ಆದ್ಯತೆ ಸೇರಿದಂತೆ ಜನರಿಗೆ ಅತಿ ಅವಶ್ಯಕವಾಗಿ ಬೇಕಾದ ಸೌಲಭ್ಯಗಳು, ಪರಿಹಾರ ಕುರಿತು ಹೆಚ್ಚಿನ ಗಮನ ಹರಿಸಬೇಕು. ಹಾಗೂ ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಇಲಾಖೆಗಳಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಪಟ್ಟಿ ಮಾಡಿ ವರದಿ ನೀಡಬೇಕೆಂದು ತಿಳಿಸಿದರು.

       ನೀರು, ರಸ್ತೆ ಸೇರಿದಂತೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದರೊಂದಿಗೆ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಯಮಾನುಸಾರ ಅನುಷ್ಟಾನಕ್ಕೆ ತರಬೇಕು ಅಧಿಕಾರಿಗಳಿಗೆ ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅರಣ್ಯ ಅಧಿಕಾರಿ ಶಿವಶಂಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...