ಮಂಗಳೂರು: ನಗರದ ಹೊರವಲಯದ ಅಡ್ಯಾರ್ನಲ್ಲಿ ಮೂವರ ತಂಡವೊಂದು ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಡ್ಯಾರ್ ನಿವಾಸಿ ಗ್ರಾಮ ಪಂಚಾಯತ್ ಸದಸ್ಯ ಯಾಕೂಬ್(46) ಮೃತಪಟ್ಟ ವ್ಯಕ್ತಿಯಾಗಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಅವರನ್ನು ಆಸ್ಪತ್ರೆಗೆ ಕೊಂಡೊಯ್ದ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾಕೂಬ್ ಮತ್ತು ಶಾಕೀರ್ಗೆ ವೈಯಕ್ತಿಕ ವಿಚಾರದಲ್ಲಿ ಮನಸ್ತಾಪವಿದ್ದು, ಆಗಾಗ ಇದೇ ವಿಚಾರದಲ್ಲಿ ವಾಗ್ವಾದ ನಡೆಯುತ್ತಿತ್ತು.
ಶುಕ್ರವಾರ ಸಂಜೆ ಶಾಕೀರ್ಗೆ ಮೊಬೈಲ್ ಕರೆ ಮಾಡಿದ ಯಾಕೂಬ್ ಅಡ್ಯಾರ್ ಪದವು ಪ್ರದೇಶಕ್ಕೆ ಬರಲು ಹೇಳಿದ್ದಾನೆ. ಅದರಂತೆ ತನ್ನ ಇಬ್ಬರು ಗೆಳೆಯರೊಂದಿಗೆ ಶಾಕೀರ್ ಬಂದಿದ್ದು, ಈ ವೇಳೆ ಮತ್ತೆ ವಾಗ್ವಾದ ನಡೆದಿದೆ. ಇದರಿಂದ ಕುಪಿತಗೊಂಡ ಶಾಕೀರ್ ಮತ್ತು ತಂಡ ಯಾಕೂಬ್ಗೆ ಮಾರಣಾಂತಿಕ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಕುಸಿದು ಬಿದ್ದಿದ್ದ ಯಾಕೂಬ್ನನ್ನು ಗಮನಿಸಿದ ಸ್ಥಳೀಯರು ಆತನನ್ನು ನಗರದ ಆಸ್ಪತ್ರೆಗೆ ಕರೆದೊಯ್ದಿದ್ದು, ಈ ವೇಳೆ ಚಿಕಿತ್ಸೆ ಫಲಿಸದೇ ಯಾಕೂಬ್ ಮೃತಪಟ್ಟಿದ್ದಾನೆ.
ಯಾಕೂಬ್ ಅವರಿಗೆ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಅಲ್ಲದೇ ಯಾಕೂಬ್ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಯಾಕೂಬ್ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ