ಕಲಬುರಗಿ: ವಿಭಾಗೀಯ ಕೇಂದ್ರವಾದ ಕಲಬುರಗಿ ಜಿಲ್ಲೆ ರಸ್ತೆ ಮತ್ತು ವಾಯು ಸಾರಿಗೆ, ವಸತಿ ಸೇರಿದಂತೆ ಸಕಲ ಮೂಲಸೌಕರ್ಯಗಳಿದ್ದು, ಅನೇಕ ರಾಜ್ಯ ಮತ್ತು ರಾಷ್ಟ್ರ್ರ ಮಟ್ಟದ ಕ್ರೀಡಾಕೂಟಗಳನ್ನು ಇಲ್ಲಿ ಯಶಸ್ವಿಯಾಗಿ ನಡೆಸಿರುವುದರಿಂದ ಪ್ರಸಕ್ತ 2020-21ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಕಲಬುರಗಿಯಲ್ಲಿಯೇ ಆಯೋಜಿಸಲು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ವರ್ಷ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಹ ಇಲ್ಲಿ ದಾಖಲೆಯ ಪ್ರಮಾಣದಲ್ಲಿ ಯಶಸ್ವಿಯಾಗಿ ಜರುಗಿದ ಉದಾಹರಣೆಯಿದೆ. ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜನೆಗೆ ಕಲಬುರಗಿ ಜಿಲ್ಲೆ ಆತಿಥ್ಯ ವಹಿಸಲು ಸಿದ್ಧವಿದ್ದು, ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಫೆಬ್ರವರಿ 19 ಮತ್ತು 20ಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟ: ಕಲಬುರಗಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಫೆಬ್ರವರಿ 19 ಮತ್ತು 20 ರಂದು ನಡೆಸಲು ಸಭೆ ಒಪ್ಪಿಗೆ ಸೂಚಿಸಿದ್ದು, ಕೋವಿಡ್-19 ಮುನ್ನೆಚ್ಚರಿಕೆಯೊಂದಿಗೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಅವರಿಗೆ ಡಿ.ಸಿ. ಅವರು ನಿರ್ದೇಶನ ನೀಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಸಲ್ಲಿಸಬೇಕು. ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಈ ವರ್ಷ ಈಜು ಸ್ಪರ್ಧೇ ಆಯೋಜಿಸದಂತೆ ಸಭೆ ನಿರ್ಣಯ ಕೈಗೊಂಡಿದೆ. ಇದಲ್ಲದೆ ವೈಯಕ್ತಿಕ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಕನಿಷ್ಠ 4 ಜನ ಸ್ಪರ್ಧಾಳಗಳು ಇದ್ದಲ್ಲಿ ಮಾತ್ರ ಸ್ಪರ್ಧೆ ಆಯೋಜಿಸಲು ಸಹ ಸಭೆ ಒಪ್ಪಿಗೆ ಸೂಚಿಸಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಮಾತನಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸುವ ನೌಕರರಿಗೆ 2 ದಿನ ಓ.ಓ.ಡಿ. ಸೌಲಭ್ಯ ಒದಗಿಸಲು ಸೂಕ್ತ ಆದೇಶ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ. ಅವರಲ್ಲಿ ಮನವಿ ಮಾಡಿಕೊಂಡರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಅವರು ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜನೆಗೆ ಇದೂವರೆಗೆ ಕೈಗೊಂಡ ಪೂರ್ವಸಿದ್ಧತೆಗಳ ಬಗ್ಗೆ ಸಭೆಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ದಿಲೀಶ್ ಸಾಸಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ದಯಾನಂದ ಪಾಟೀಲ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಮಾರುತಿ, ಆರೋಗ್ಯ ಇಲಾಖೆಯ ಡಾ.ರವಿಂದ್ರ ನಾಗಲೀಕರ್, ಮಹಾನಗರ ಪಾಲಿಕೆಯ ಉಪ ಆಯುಕ್ತ (ಅಭಿವೃದ್ಧಿ) ಡಾ.ಮೊಹಮ್ಮದ್ ಶೆಕಾವತ್ ಹುಸೇನ್, ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಅಬ್ದುಲ್ ಅಜೀಮ್, ರಾಜ್ಯ ಪರಿಷತ್ ಸದಸ್ಯರಾದ ಹಣಮಂತರಾಯ ಬಿ. ಗೋಳಸಾರ, ಉಪಾಧ್ಯಕ್ಷ ಎಂ.ಬಿ.ಪಾಟೀಲ, ಕೇಂದ್ರ ಸಂಘದ ಸಂಘಟನಾ ಕಾರ್ಯದರ್ಶಿ ಸಿದ್ಧಲಿಂಗಯ್ಯ ವ್ಮಠಪತಿ, ಲೆಕ್ಕಪರಿಶೋಧಕ ಗುರುಲಿಂಗಪ್ಪ ಪಾಟೀಲ, ಪ್ರಚಾರ ಸಮಿತಿಯ ಕಾರ್ಯದರ್ಶಿ ರವಿ ಮಿರಸ್ಕರ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಇದ್ದರು.