ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಧಾರವಾಡ: ಕೊರೊನಾ ವೈರಾಣು ದೇಶಾದ್ಯಂತ ತೀವ್ರ ತರದಲ್ಲಿ ಹರಡುತ್ತಿದೆ. ಈ ವೈರಾಣು ನಿಯಂತ್ರಣ ಕಾರ್ಯಕ್ಕೆ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿಯಂತ್ರಣ ಕಾರ್ಯದ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ ವಹಿಸಿದರೆ ಅವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಪ್ರಕೃತಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಕೋವಿಡ್ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಕಾರ್ಯತಂಡದ ಸಭೆಯ ಅಧ್ಯಕ್ಷತೆ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ನಿಯಂತ್ರಣದ ಕಾರ್ಯ ಉತ್ತಮವಾಗಿ ಸಾಗಿದೆ. ಇದೀಗ ಹವಾಮಾನದಲ್ಲಿ ಬದಲಾವಣೆ ಆಗುತ್ತಿರುವುದು ಹಾಗೂ ದೇಶದಾದ್ಯಂತ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿಗಳು ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಮೊದಲ ಪ್ರಾಶಸ್ತ್ಯ ನೀಡಿ ಕರ್ತವ್ಯ ನಿರ್ವಹಿಸಬೇಕು. ಬೇಜವಾಬ್ದಾರಿ ತೋರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಸೂಚನೆ ನೀಡಿದರು.
ನಿಗದಿತ ಕೋವಿಡ್ ಆಸ್ಪತ್ರೆಗಳು, ಕೋವಿಡ್ ಕೇರ್ ಸೆಂಟರ್ಗಳಲ್ಲಿ ಅಗತ್ಯ ಹಾಸಿಗೆ ಮತ್ತು ವೈದ್ಯಕೀಯ, ಅರೇವೈದ್ಯಕೀಯ ಸಿಬ್ಬಂದಿ ನಿಯೋಜಿಸುವ ಕಾರ್ಯ ಆಧ್ಯತೆಯಡಿ ಕೈಗೊಳ್ಳಬೇಕು. ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಮ್ಮ ಒಟ್ಟು ಸಾಮಥ್ರ್ಯದ ಹಾಸಿಗೆಗಳಲ್ಲಿ ಶೇ.50 ರಷ್ಟು ಕೋವಿಡ್ ಚಿಕಿತ್ಸೆಗೆ, ಉಳಿದ ಶೇ.50 ರಷ್ಟು ಇತರೆ ಸಾಮಾನ್ಯ ಖಾಯಿಲೆಗಳ ಚಿಕಿತ್ಸೆಗೆ ಮೀಸಲಿಡಬೇಕು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರನ್ನು ಪತ್ತೆ ಮಾಡುವ ತಂಡದಲ್ಲಿ ಹೆಚ್ಚಿನ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸೇರಿಸಿಕೊಂಡು ಸೂಕ್ತ ತರಬೇತಿ ನೀಡಿ ಪತ್ತೆ ಕಾರ್ಯ ಇನ್ನಷ್ಟು ಚುರುಕುಗೊಳಿಸಬೇಕು. ಹೋಂ ಕ್ವಾರಂಟೈನ್ ಉಲ್ಲಂಘಿಸುವವರ ಪಟ್ಟಿಯನ್ನು ಪ್ರತಿದಿನ ತಹಶೀಲ್ದಾರರಿಗೆ ನೀಡಿ ಅಂತಹ ವ್ಯಕ್ತಿಗಳನ್ನು ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಬೇಕು. ಪೊಲೀಸ್ರ ಮೂಲಕ ಪ್ರಕರಣ ದಾಖಲಿಸುವುದು ಮತ್ತು ಮುಚ್ಚಳಿಕೆ ಪತ್ರ ಬರೆಯಿಸಿಕೊಳ್ಳುವ ಕಾರ್ಯ ನಡೆಯಬೇಕು. ಕೋವಿಡ್ನಿಂದ ಮೃತ ವ್ಯಕ್ತಿಗಳ ಪಾರ್ಥಿವ ಶರೀರದ ಹಸ್ತಾಂತರ ಮತ್ತು ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಗಳಂತೆ ನಡೆಯಬೇಕು. ಈ ಕಾರ್ಯದಲ್ಲಿ ಲೋಪವಾಗಬಾರದು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಸಿ. ಸತೀಶ್ ಮಾತನಾಡಿ, ಕೋವಿಡ್ ನಿಯಂತ್ರಣ ಕಾರ್ಯ ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ. ಕರ್ತವ್ಯಕ್ಕೆ ನಿಯೋಜಿಸಿದ ಯಾವೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಈ ಕಾರ್ಯದಲ್ಲಿ ನಿರ್ಲಕ್ಷ ತೋರದೇ ಆಧ್ಯತೆಯಡಿ ಜವಾಬ್ದಾರಿ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಕ್ವಾರಂಟೈನ್ ಸೆಂಟರ್ಗಳಿಗೆ ಮತ್ತು ಮಾನವ ಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ ಎಂದರು.
ಕಿಮ್ಸ್ ನಿರ್ದೇಶಕ ಡಾ: ರಾಮಲಿಂಗಪ್ಪ ಅಂಟರಠಾಣೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲೆಯ ತಹಶೀಲ್ದಾರರು ಸಭೆಯಲ್ಲಿ ಭಾಗವಹಿಸಿದ್ದರು.