ಅಧಿಕಾರಿಗಳೆ, ಹಳ್ಳಿಗಳಿಗೆ ಹೋಗಿ ಜನರ ಸಮಸ್ಯೆ ಕೇಳಿ. ಅಗತ್ಯವಿದ್ದಲ್ಲಿ ಸರಕಾರದ ನೆರವು ತಲುಪಿಸಿ: ಸಚಿವ ಸಂತೋಷ ಲಾಡ್ ಆದೇಶ.

Source: SO News | By Laxmi Tanaya | Published on 26th July 2023, 10:22 PM | State News | Don't Miss |

ಧಾರವಾಡ : ಜಿಲ್ಲೆಯಲ್ಲಿ ಕೆಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು. ಮತ್ತು ಅವರಿಗೆ ಅಗತ್ಯವಿರುವ ಸರಕಾರದ ನೆರವು, ಸಹಾಯ ಮಾಡಬೇಕೇಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಅವರು ಬುಧವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪಕ್ಕೆ ಸಂಭಂದಿಸಿದ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು.

ಅಧಿಕಾರಿಗಳು ಕಚೇರಿಯಲ್ಲಿ ಕಾಲ ಕಳೆಯದೆ, ಜನರ ಬಳಿ ಹೋಗಬೇಕು. ಮನೆ ಹಾನಿ ಪ್ರಕರಣಗಳನ್ನು ಅಧಿಕಾರಿಗಳು ಸ್ವತಃ ಭೇಟಿ ನೀಡಿ, ಪರಿಶೀಲಿಸಬೇಕು. ಜನರ ಸಂಚಾರಕ್ಕೆ, ವಿದ್ಯಾರ್ಥಿಗಳ ಓಡಾಟಕ್ಕೆ ಅಡಚಣೆ ಆಗಿರುವ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಅಭಾವದಿಂದ ಮುಂಗಾರು ಬಿತ್ತನೆಗೆ ಹಿನ್ನಡೆ ಆಗಿದೆ. ಬಿತ್ತಿದ ಕೆಲವು ರೈತರ ಬೆಳೆ ಸಕಾಲಕ್ಕೆ ಮಳೆ ಇಲ್ಲದೆ ಹಾಗೂ ಈಗ ಅತಿ ಮಳೆಯಿಂದಾಗಿ ಬೆಳೆ ಕುಂಠಿತವಾಗಿದೆ. ಕೃಷಿ ಇಲಾಖೆ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳನ್ನು ಸಕ್ರಿಯವಾಗಿ ತೊಡಗಿಸಬೇಕು. ಪ್ರತಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ರೈತರಲ್ಲಿ ಬೆಳೆ ವಿಮೆ ಬಗ್ಗೆ ಜಾಗೃತಿ ಮೂಡಿಸಬೇಕು. ಬಿತ್ತಿದ ಬೆಳೆ ನಿರ್ವಹಣೆ, ಹಿಂಗಾರಿ ಬಿತ್ತನೆಗೆ ಅಗತ್ಯವಿರುವ ಕೃಷಿ ಸಲಹೆ ನೀಡಿ, ರೈತರಿಗೆ ನೆರವಾಗಬೇಕು. ರಾಜ್ಯ ಸರಕಾರದ ಯೋಜನೆ, ಸಬ್ಸಿಡಿಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಉತ್ತಮವಾಗಿ ಮಳೆ ಆಗಿರುವುದರಿಂದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಿದೆ. ಜಲ್ ಜೀವನ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಬೇಗ ಪೂರ್ಣಗೊಳಿಸಬೇಕು. ಕಾಮಗಾರಿ ಗುಣಮಟ್ಟ ಕಳಪೆ ಮಾಡಿದರೆ ಸಂಭಂದಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರು ಎಚ್ಚರಿಸಿದರು.

ಸರಕಾರದ ಗ್ಯಾರಂಟಿ ಯೋಜನೆಗಳ ಲಾಭ ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪುವಂತೆ  ಅಧಿಕಾರಿಗಳು ಕ್ರಮವಹಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿ ಹಳ್ಳಿಗಳಿಗೆ, ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮತ್ತು ಬೇರೆ ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತಮ್ಮ ಪ್ರವಾಸ ಹಾಗೂ ಗ್ರಾಮ ಭೇಟಿ ವಿವರಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿ ವಾರ ತಪ್ಪದೇ ಸಲ್ಲಿಸಬೇಕು. ಈ ಕುರಿತು ತಾವು ಸ್ವತಃ ಗಮನ ಹರಿಸಿ, ಪರಿಶೀಲಿಸುವುದಾಗಿ ಸಚಿವ ಸಂತೋಷ ಲಾಡ್ ಅವರು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾವಾರು ಪ್ರಗತಿ ವರದಿ ಹಾಗೂ ಕೈಗೊಂಡ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತ ಸಂತೋಷ ಬಾಬು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಧಾರವಾಡ ಕೃಷಿ ಇಲಾಖೆ ಜಂಟಿನಿರ್ದೇಶಕ ಡಾ.ಕಿರಣಕುಮಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ಸಿ.ಬದ್ರಣ್ಣವರ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ತಿಮ್ಮಯ್ಯ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ, ಅಗ್ನಿಶಾಮಕ ಧಾರವಾಡ ಠಾಣಾಧಿಕಾರಿ ಅಮೃತ ಟಿ., ಮತ್ತು ಜಿಲ್ಲೆಯ ಎಲ್ಲ ತಹಸಿಲ್ದಾರರು ಹಾಗೂ ವಿವಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...