ಮಂಡ್ಯ : ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣದಲ್ಲೇ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೆಲಸಮಾಡಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ ಪುಟ್ಟಣ್ಣಯ್ಯ ಅವರು ತಿಳಿಸಿದರು.
ಅವರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಪ್ರಗತಿ ಪರೀಶಿಲನಾ ಸಭೆ ನಡೆಸಿ ಮಾತನಾಡಿದರು.
ಅಧಿಕಾರಿಗಳ ಸಹಕಾರವಿಲ್ಲದೇ ಯಾವುದೇ ಕೆಲಸಗಳು ಆಗುವುದಿಲ್ಲ ಆಗಾಗಿ ಅಧಿಕಾರಿಗಳು ಸಂಯಮದಿಂದ ವರ್ತಿಸಿ ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಿ ಎಂದರು.
ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸಮಾಡಿ ಒಳ್ಳೆ ಪರಿಸರ ಸೃಷ್ಟಿಸಿ ಮುಂದಿನ ಪೀಳಿಗೆಗೆ ಮಾದರಿಯಾಗೋಣ ಎಂದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚು ದೂರುಗಳು ನನ್ನ ಗಮನಕ್ಕೆ ಬಂದಿವೆ. ಅದನ್ನು ನಿಮ್ಮ ಹಂತದಲ್ಲೆ ಬಗೆಹರಿಸಿಕೊಳ್ಳಿ ಮುಂದೆ ಅವು ನನ್ನ ಬಳಿ ಬರದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್, ಯೋಜನಾಧಿಕಾರಿ ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.