ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Source: SO News | By Laxmi Tanaya | Published on 21st July 2023, 8:19 PM | State News |

ಬೆಂಗಳೂರು  : ಬೆಲೆ ಏರಿಕೆಯಿಂದ ತತ್ತರಿಸಿರುವ  ಜನರ ಕೈಗೆ ದುಡ್ಡು ನೀಡಲು ನಮ್ಮ ಸರ್ಕಾರ ಪಂಚ ಗ್ಯಾರೆಂಟಿಗಳನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಅವರು ಇಂದು ಮಾತನಾಡಿದರು.

ಸಾಮಾಜಿಕ ಸ್ವಾತಂತ್ರ್ಯಯಿಲ್ಲದಿದ್ದರೆ , ದೇಶಕ್ಕೆ ಸ್ವಾತಂತ್ರ್ಯ ಬಂದರೂ ಪ್ರಯೋಜನವಿಲ್ಲ . ರಾಜಕೀಯ ಪ್ರಜಾಪ್ರಭುತ್ವಯಿದ್ದರೆ ಸಾಲದು, ಸಾಮಾಜಿಕ ಪ್ರಜಾಪ್ರಭುತ್ವವಿರಬೇಕು. ಸಮಾಜಿಕ ಹಾಗೂ ಆರ್ಥಿಕ ಅಸಮಾನತೆಯಿಂದ ಕಷ್ಟದಲ್ಲಿರುವವರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಡಾ. ಅಂಬೇಡ್ಕರ್ ಅವರು ಹೇಳಿದ್ದರು. ಎಲ್ಲರಿಗೂ ಸಮಪಾಲು , ಸಮಬಾಳು  ಎಂಬ ಧ್ಯೇಯವೇ ಸಮಾಜವಾದ. ನಮ್ಮ ಸರ್ಕಾರ ಜನರ ಜೇಬಿಗೆ ದುಡ್ಡು ಕೊಡುವ ಮೂಲಕ  ಉದ್ಯೋಗ ಸೃಷ್ಟಿ , ಜಿಡಿಪಿ ಬೆಳವಣಿಗೆ, ತೆರಿಗೆ ಮೂಲಕ್ಕೂ ದಾರಿಯಾಗುತ್ತದೆ ಎಂದರು.

ಕೇಂದ್ರದಿಂದ ರಾಜ್ಯಗಳಿಗೆ ನೀಡುವ ಸಹಾಯಧನ ಕಡಿಮೆಯಾಗಿದೆ : ನಾವು ನುಡಿದಂತೆ ನಡೆದಿದ್ದೇವೆ. 165 ಭರವಸೆಗಳಲ್ಲಿ  158 ಭರವಸೆಗಳನ್ನು ಈಡೇರಿಸಿದ್ದೇವೆ.. 2018 ಮಾರ್ಚ್ ಅಂತ್ಯಕ್ಕೆ 2,45,000 ಕೋಟಿ ಸಾಲ ಇತ್ತು. 2023 ಕ್ಕೆ ಇದು 5,20,000 ಕೋಟಿ ರೂ.ಸಾಲವಿದೆ. ನಾವು ಬಡವರ ಪರವಾಗಿದ್ದೇವೆ. ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನರ ಜೇಬಿಗೆ ಹಣ ತುಂಬುವ ಕೆಲಸ ಮಾಡಿದ್ದೇವೆ. ಸಾರ್ವತ್ರಿಕ ಮೂಲ ಆದಾಯವನ್ನು ಎಲ್ಲಾ ಅಭಿವೃದ್ಧಿಯಾಗಿರುವ ರಾಜ್ಯಗಳು ಮಾಡುತ್ತಿವೆ. .  14  ಮತ್ತು 15 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ ರಾಜ್ಯಕ್ಕೆ ಬರುವ ಅನುದಾನ ಕಡಿಮೆಯಾಗಿದೆ. 5495 ಕೋಟಿ ರೂ. ಮಧ್ಯಂತರ ಪರಿಹಾರ  ನೀಡಲಿಲ್ಲ.  25 ಜನ ಸಂಸದರಿದ್ದರೂ ಇದರ ಬಗ್ಗೆ ಲೋಕಸಭೆಯಲ್ಲಿ ಪ್ರಶ್ನಿಸಲಿಲ್ಲ ಎಂದು ತಿಳಿಸಿದರು. ರಾಜ್ಯಗಳಿಗೆ ನೀಡುವ ಸಬ್ಸಿಡಿಗಳು ಕಡಿಮೆಯಾಗಿದೆ. ಯೋಜನೆಯಲ್ಲಿ ಶೇ. 80 ರಷ್ಟು ರಾಜ್ಯ ಹಾಗೂ ಶೇ.20 ರಷ್ಟು ಕೇಂದ್ರ ಸರ್ಕಾರ ಹಾಕಿ , ಕೇಂದ್ರ ಪುರಸ್ಕೃತ ಯೋಜನೆ ಎನ್ನಲಾಗುತ್ತದೆ. ಈ ವರ್ಷ ರಾಜ್ಯದಿಂದ ವಿವಿಧ ತೆರಿಗೆಗಳ ರೂಪದಲ್ಲಿ ಕೇಂದ್ರಕ್ಕೆ 4 ಲಕ್ಷ ಕೋಟಿ ರೂ. ಹೋಗುತ್ತಿದ್ದು, ಅದರಲ್ಲಿ ತೆರಿಗೆ ಪಾಲು ಹಾಗೂ  ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸೇರಿ ಕೇವಲ 50257 ಕೋಟಿ ಬರುತ್ತದೆ ಎಂದರು.

ತೆರಿಗೆ ಸಂಗ್ರಹಕ್ಕೆ ಗುರಿ ಹೆಚ್ಚಳ : ತೆರಿಗೆ ಸೋರಿಕೆಯನ್ನು ತಡೆದು , ತೆರಿಗೆ ಸಂಗ್ರಹಕ್ಕೆ ಪ್ರಮುಖ ಇಲಾಖೆಗಳಿಗೆ ಹೆಚ್ಚಿನ ಗುರಿಯನ್ನು ನೀಡಲಾಗಿದೆ. 13,500 ಕೋಟಿ ತೆರಿಗೆ ಬಾಬ್ತುಗಳಿಂದ ಸಂಗ್ರಹವಾಗುತ್ತದೆ.  ನಮ್ಮ ಸರ್ಕಾರ 85,808 ಕೋಟಿ ಹೆಚ್ಚುವರಿ ಸಾಲ ಪಡೆಯುತ್ತಿದೆ. ಯೋಜನೆಗಳ ಆದ್ಯತೀಕರಣದಿಂದ ರೂ. 34,650 ಕೋಟಿ ಕ್ರೋಢೀಕರಣ ಮಾಡಲಾಗುತ್ತದೆ.  ಇದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯೊಳಗೆ ಇದೆ.  ಮುಂದೆಯೂ ಉಳಿತಾಯ ಬಜೆಟ್ ಮಾಡಲು ಪ್ರಯತ್ನಿಸಲಾಗುವುದು ಎಂದರು.

ಪಂಚ ಗ್ಯಾರೆಂಟಿಗಳಿಂದ  1.30 ಕೋಟಿ ಕುಟುಂಬಗಳಿಗೆ ಅನುಕೂಲ : ಸಂಪನ್ಮೂಲ ಕ್ರೋಢೀಕರಣ , ಪಂಚ ಯೋಜನೆಗಳಿಗೆ ಅನುದಾನ ಮೀಸಲು ಮಾಡಲಾಗಿದೆ. ರಾಜ್ಯದ ಆರ್ಥಿಕತೆ ದಿವಾಳಿಯಾಗುತ್ತಿಲ್ಲ. 76 ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ.  ಶಕ್ತಿ ಯೋಜನೆ ಮೂಲಕ ಪ್ರತಿ ದಿನ ಸುಮಾರು 50 ಲಕ್ಷ ಜನ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. 2800 ಕೋಟಿಯನ್ನು ಈ ಯೋಜನೆಗೆ ಈ ವರ್ಷ ಇಡಲಾಗಿದೆ. ಗೃಹಜ್ಯೋತಿ ಯೋಜನೆ ಜುಲೈ ತಿಂಗಳಿನಿಂದ ಜಾರಿ ಮಾಡಿ , ಫಲಾನುಭವಿಗಳು ಆಗಸ್ಟ್ ತಿಂಗಳಿನಿಂದ ಬಿಲ್ಲು ಪಾವತಿಸುವ ಅಗತ್ಯವಿಲ್ಲ. ರಾಜ್ಯದಲ್ಲಿ ಜನರ ಗೃಹಬಳಕೆಯ ವಿದ್ಯುತ್ ಸರಾಸರಿ 53 ಯೂನಿಟ್ .12 ತಿಂಗಳ ಸರಾಸರಿಗೆ ಶೇ.10 ರಷ್ಟು ಸೇರಿಸಿ , ಉಚಿತ ವಿದ್ಯುತ್ ನೀಡಲಾಗುವುದು. ರಾಜ್ಯಕ್ಕೆ ಅನ್ನಭಾಗ್ಯ ಯೋಜನೆಗೆ 2,29,000 ಮೆ.ಟನ್ ಅಕ್ಕಿ ಬೇಕಾಗುತ್ತದೆ. ಅಕ್ಕಿ ಸರಬರಾಜಿಗೆ ಕೇಂದ್ರ ನಿರಾಕರಿಸಿದ್ದರಿಂದ 5 ಕೆಜಿ ಬದಲು 170 ರೂ.  ವೆಚ್ಚವನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದ್ದು , ಈ ಯೋಜನೆಗೆ ಸುಮಾರು 10 ಸಾವಿರ ಕೋಟಿ ರೂ. ಮೀಸಲಿರಿಸಲಾಲಿದೆ. ಈವರೆಗೆ 57.51 ಲಕ್ಷ ಕುಟುಂಬಗಳಿಗೆ  337.08 ಕೋಟಿ ಬ್ಯಾಂಕ್ ಖಾತೆಗೆ ತಲುಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 34000 ಕೋಟಿ ರೂ. , ಈ ವರ್ಷ 18000 ಕೋಟಿ ರೂ ಮೀಸಲಿರಿಸಲಾಗಿದೆ. ಯುವನಿಧಿ ಯೋಜನೆಯಡಿ 2022-23 ರಲ್ಲಿ ಪಾಸಾದ ಪದವಿಧರರು ಹಾಗೂ ಡಿಪ್ಲೋಮಾ ಪಡೆದಿರುವವರಿಗೆ 3000 ರೂ. ಹಾಗೂ 1500 ರೂ. ಅನುಕ್ರಮವಾಗಿ 24 ತಿಂಗಳವರಗೆ  ನೀಡಲಾಗುವುದು. ಪಂಚ ಗ್ಯಾರೆಂಟಿಗಳಿಂದ  1.30 ಕೋಟಿ ಕುಟುಂಬಗಳಿಗೆ ಅನುಕೂಲವಾಗುತ್ತಿದೆ ಎಂದರು. 

ಗ್ಯಾರಂಟಿಗಳಿಂದ ಜನ ಸಂತುಷ್ಟರಾಗಿದ್ದಾರೆ: ನಮ್ಮ ಸರ್ಕಾರ ನೀಡಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ತಪ್ಪದೆ ಜಾರಿ ಮಾಡುತ್ತಿದ್ದು, ಜನರೂ ಸಂತುಷ್ಟರಾಗಿದ್ದಾರೆ. ನಮ್ಮ ಬಜೆಟ್ ಗಾತ್ರ 3,27,747 ಕೋಟಿ ರೂ. , ಕಳೆದ ಸರ್ಕಾರದ ಬಜೆಟ್ ಗಿಂತ 62027 ಕೋಟಿ ರೂ. ಶೇ.23 ರಷ್ಟು ಅಭಿವೃದ್ಧಿಯನ್ನು ಸೂಚಿಸುತ್ತಿದೆ.  ನಾವು 5 ವರ್ಷದಲ್ಲಿ 14,54,663 ಮನೆಗಳನ್ನು ಕಟ್ಟಿಸಿದೆವು .  ನಾವು ಹಿಂದಿನ ಸರ್ಕಾರಕ್ಕಿಂತ 6 ಲಕ್ಷ ಮನೆಗಳನ್ನು ಹೆಚ್ಚಾಗಿ ನಿರ್ಮಿಸಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ 14,169 ಕಿ.ಮೀ. ಹೆದ್ದಾರಿ ಅಭಿವೃದ್ಧಿಪಡಿಸಿದ್ದೆವು.  ಅವರ ಸರ್ಕಾರ 8037 ಕಿ.ಮಿ ಮಾತ್ರ ನಿರ್ಮಿಸಿದ್ದಾರೆ. ನಮ್ಮ ಸರ್ಕಾರದ 5 ವರ್ಷದಲ್ಲಿ 696 ಹಾಸ್ಟೆಲ್ ನಿರ್ಮಾಣ ಮಾಡಲಾಗಿದೆ .ಎಸ್ ಸಿಎಸ್ ಪಿ / ಟಿಎಸ್ ಪಿ   ಕಾನೂನು ಬಂದ ನಂತರ, ನಮ್ಮ ಸರ್ಕಾರ 5 ವರ್ಷದಲ್ಲಿ 88530 ಕೋಟಿ  ಖರ್ಚು ಮಾಡಲಾಗಿದೆ.. ನಮ್ಮ ಬಜೆಟ ಗಾತ್ರ 2018-19 ರಲ್ಲಿ  202297 ಕೊಟಿ ಇತ್ತು. ಆಗ 29691 ಕೋಟಿ ರೂ. ಎಸ್ ಸಿ ಎಸ್ ಟಿ ಗಳಿಗೆ ಮೀಸಲಿಟ್ಟಿದ್ದೆವು. ಈ ವರ್ಷದ ಬಜೆಟ್ ನಲ್ಲಿ ನಮ್ಮ ಸರ್ಕಾರ ಎಸ್ ಸಿಎಸ್ ಪಿ / ಟಿಎಸ್ ಪಿ    ಯೋಜನೆಗಳಿಗೆ 34294 ಕೋಟಿ ಮೀಸಲಿಡಲಾಗಿದೆ. ನಮ್ಮದು ಬಡವರ ಪರ ಹಾಗೂ ದಲಿತಪರವಾದ ಸರ್ಕಾರ ಎಂದು ತಿಳಿಸಿದರು.

ಅವಕಾಶ ವಂಚಿತರಿಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ : ಈ ಸರ್ಕಾರ ಸಮಾಜದ ಎಲ್ಲ ವರ್ಗದ ಜನರು, ಅವಕಾಶ ವಂಚಿತರಿಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನಿಸಲಾಗಿದ್ದು, ಮುಂದೆಯೂ ಪ್ರಯತ್ನಿಸಲಾಗಿದೆ. ಜನಪರ , ಅಭಿವೃದ್ಧಿಪರ, ದೂರದೃಷ್ಟಿಯುಳ್ಳ, ರಾಜ್ಯ ಆರ್ಥಿಕತೆ ಬೆಳವಣಿಗೆಗೆ ಪೂರಕವಾದ ಬಜೆಟ್ ನ್ನು ಮಂಡಿಸಲಾಗಿದೆ. ರಾಜ್ಯದ ಜನರು ಈ ಬಜೆಟ್ ನ್ನು ಸ್ವಾಗತಿಸಿದ್ದಾರೆ. ಬಜೆಟ್ ಚರ್ಚೆಯಲ್ಲಿ ಭಾಗವಹಿಸಿ , ಬಜೆಟ್ ಸ್ವಾಗತಿಸಿದವರು ಹಾಗೂ ಟೀಕಿಸಿದವರಿಗೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...