ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಪ್ರತಿ ಮಾಹೆ ಜಿಲ್ಲಾ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಗುರುತಿಸಿ ನೀಡಲಾಗುವ "ಪಿಡಿಒ ಆಫ್ ದಿ ಮಂತ್" ಪ್ರಶಸ್ತಿಯ ಜೂನ್ ತಿಂಗಳಿಗೆ ಆಯ್ಕೆಯಾದ ದಾಂಡೇಲಿ ತಾಲ್ಲೂಕಿನ ಅಂಬಿಕಾನಗರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಟಿ. ರಾಠೋಡ ಅವರಿಗೆ ಸೋಮವಾರ ಜಿಲ್ಲಾ ಪಂಚಾಯತಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು.
ಕೇAದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮರ್ಪಕ ಅನುಷ್ಠಾನಗೊಳಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಅತ್ಯುತ್ತಮ ಕಾರ್ಯಕ್ಷಮತೆಯನ್ನು ತೋರಿದವರಿಗೆ ಕೆಲವು ಮಾನದಂಡಗಳನ್ನು ಆಧರಿಸಿ ಪಿಡಿಓ ಆಫ್ ದಿ ಮಂತ್ ಪ್ರಶಸ್ತಿ ನೀಡಿ, ಪ್ರೋತ್ಸಾಹಿಸಲಾಗುತ್ತಿದೆ. ಜೂನ್ ತಿಂಗಳ ಪ್ರಶಸ್ತಿಗೆ ಭಾಜನರಾದ ರಾಠೋಡ ಅವರ ಹಾಗೆ ಎಲ್ಲ ಗ್ರಾಮ ಪಂಚಾಯತ್ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಿಇಓ ಹೇಳಿದರು.
ಪ್ರಶಸ್ತಿ ಪಡೆದು ಮಾತನಾಡಿದ ಸಂತೋಷ ರಾಠೋಡ, ಗ್ರಾಮೀಣ ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಪಿಡಿಓ ಅವರಿಗೆ ಈ ರೀತಿಯ ಪ್ರಶಸ್ತಿ ನೀಡುವುದರಿಂದ ಇನ್ನೂ ಉತ್ತಮವಾಗಿ ಕರ್ತವ್ಯ ನಿಭಾಹಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ಉಪ ಕಾರ್ಯದರ್ಶಿಗಳು, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಯೋಜನಾ ನಿರ್ದೇಶಕರು, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ದಾಂಡೇಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.