ಶಿವಮೊಗ್ಗ : ರಾಜ್ಯ ಹೈಕೋರ್ಟ್ ನಿರ್ದೇಶನ ಪ್ರಕಾರ ಜಿಲ್ಲೆಯಲ್ಲಿರುವ ಮ್ಯಾನುವಲ್ ಸ್ಕ್ಯಾವೆಂಜರ್ಗಳನ್ನು ಗುರುತಿಸಲು ಸಮೀಕ್ಷೆ ಕೈಗೊಂಡು ಈ ಕುರಿತು ಸಮಗ್ರ ವರದಿಯನ್ನು ಸಲ್ಲಿಸುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಎಸ್.ಎ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾ ನ್ಯಾಯಾಲಯದಲ್ಲಿ ಹೈಕೋರ್ಟ್ ನಿರ್ದೇಶನಗಳ ಅನುಷ್ಟಾನ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಸಮೀಕ್ಷೆ ನಡೆಸಲು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಬೇಕು. ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಪಂಚಾಯತ್ಗಳು ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ಜಿಲ್ಲೆಯಲ್ಲಿ ಗುರುತಿಸಲಾಗುವ ಮ್ಯಾನುವಲ್ ಸ್ಕ್ಯಾವೆಂಜರ್ಗಳ ಪುನರ್ ವಸತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕಾಯ್ದೆ ಪ್ರಕಾರ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೈಯಿಂದ ಮಾನವ ತ್ಯಾಜ್ಯವನ್ನು ಸಾಗಿಸುವ ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕಾಗಿದೆ. ತುರ್ತು ಸಂದರ್ಭದಲ್ಲಿ ಸಹ ಯಾವುದೇ ಸುರಕ್ಷೆಗಳಿಲ್ಲದೆ ಒಳಚರಂಡಿಯ ಒಳಗೆ ಮ್ಯಾನುವಲ್ ಸ್ಕ್ಯಾವೆಂಜರ್ಗಳನ್ನು ಇಳಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಸಂದರ್ಭಗಳಲ್ಲಿ ದುರ್ಘಟನೆ ಸಂಭವಿಸಿದರೆ ಮೃತರ ಕುಟುಂಬಕ್ಕೆ 10ಲಕ್ಷ ರೂ. ಪರಿಹಾರ ಧನ ಕಾಯ್ದೆ ಪ್ರಕಾರ ಒದಗಿಸಬೇಕಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಇದುವರೆಗೆ ಎಷ್ಟು ಮ್ಯಾನುವಲ್ ಸ್ಕ್ಯಾವೆಂಜರ್ ಪ್ರಕರಣಗಳನ್ನು ದಾಖಲಿಸಲಾಗಿದೆ, ಅವರ ಪುನರ್ ವಸತಿಗೆ ಕೈಗೊಂಡ ಕ್ರಮಗಳೇನು ಇತ್ಯಾದಿಗಳ ಕುರಿತು ಮಾಹಿತಿಯನ್ನು ಹೈಕೋರ್ಟ್ಗೆ ಒದಗಿಸಬೇಕಾಗಿದೆ. ಮ್ಯಾನುವಲ್ ಸ್ಕ್ಯಾವೆಂಜಿಂಗ್ ವಿರುದ್ಧ ಜನರಲ್ಲಿ ಅರಿವು ಮೂಡಿಸುವ ವ್ಯಾಪಕ ಕಾರ್ಯವನ್ನು ನಡೆಸಬೇಕು. ಮ್ಯಾನುವಲ್ ಸ್ಕ್ಯಾವೆಂಜರ್ಗಳಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಆರೋಗ್ಯ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಬೇಕು. ಅವರ ಸೇವೆಯನ್ನು ಗುರುತಿಸುವ ಕಾರ್ಯ ಆಗಬೇಕಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್., ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೇಖರ ಹೆಚ್.ಟಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಯೋಜನಾ ನಿರ್ದೇಶಕ ಡಾ. ನಾಗೇಂದ್ರ ಹೊನ್ನಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.