ಭಟ್ಕಳ: ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸುವಂತೆ ಆಗ್ರಹಿಸಿ ಭಟ್ಕಳ ಪುರಸಭೆಯ ಹೊರಗುತ್ತಿಗೆ ನೌಕರರು ಬುಧವಾರ ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಹಾಗೂ ಪುರಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.
ಭಟ್ಕಳ ಪುರಸಭಾ ವ್ಯಾಪ್ತಿಯ ನೀರು ಸರಬರಾಜು ಮಾಡುವ ನೌಕರರು, ವಾಹನ ಚಾಲಕರು,ಯುಜಿಡಿ ನೌಕರರು,ಡಾಟಾ ಎಂಟ್ರಿ ಆಪರೇಟರ್ಗಳು ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದು ಸಾಮಾಜಿಕ ಭದ್ರತೆ ಇಲ್ಲದಂತಾಗಿದೆ ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರೊಂದಿಗೆ ಪೂರಕವಾಗಿ ದುಡಿಯುವ ಹೊರಗುತ್ತಿಗೆ ನೌಕರರನ್ನು ರಾಜ್ಯ ಸರ್ಕಾರವು ಕಡೆಗಣೆಸಿದ್ದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬ ಧೋರಣೆ ಅನುಸರಿಸುತ್ತಿದೆ. ಪ್ರತಿದಿನವೂ ಸಾರ್ವಜನಿಕರಿಗೆ ಅತ್ಯಗತ್ಯ ಸೇವೆಗಳನ್ನು ಒದಗಿಸುವಲ್ಲಿ ನಿರತರಾಗಿರುವ ಎಲ್ಲಾ ಹೊರಗುತ್ತಿಗೆ ನೌಕರರನ್ನು ಗುತ್ತಿಗೆ ಪದ್ಧತಿಯಿಂದ ವಿಮುಕ್ತಿಗೊಳಿಸಿ ಈ ಹೊರಗುತ್ತಿಗೆ ನೌಕರರಿಗೆ ಸಕಾಲಕ್ಕೆ ವೇತನ, ಪಿಎಫ್. ಇಎಸ್.ಐ ಸರಿಯಾದ ಸಮಯಕ್ಕೆ ಸಿಗಲು ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ನಗರದ ಸ್ವಚ್ಛತೆ ಯಂತಹ ಪ್ರಮುಖ ಜವಾಬ್ದಾರಿ ಕುಡಿಯುವ ನೀರು ಸರಬರಾಜು ಮಾಡುವ ಈ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡುವ ದೃಷ್ಟಿಯಿಂದ ಪೌರಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ಜಾರಿಗೊಳಿಸಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರಲು ಕ್ರಮ ಕೈಗೊಳಬೇಕೆಂದು ಎಲ್ಲಾ ಹೊರಗುತ್ತಿಗೆ ನೌಕರರ ಪರವಾಗಿ ಮನವಿ ಪತ್ರದ ಮೂಲಕ ವಿನಂತಿಸಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರ ಸಂಘದ ತಾಲೂಕು ಅಧ್ಯಕ್ಷ ಶ್ರೀಧರ್ ನಾಯ್ಕ,ಕಾರ್ಯದರ್ಶಿ ರಮೇಶ್ ಎಸ್ ಕೆ,ಚೇತನ್ ನಾಯ್ಕ ,ವಾಸು ನಾಯ್ಕ,ಮಂಜು ನಾಯ್ಕ,ಗಣೇಶ್ ಹಾಗೂ ಎಲ್ಲಾ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು.