ಮಂಗಳೂರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟೀ ಆಶ್ರಯದಲ್ಲಿ ಜರುಗಿದ ಮಗಳನ್ನು ಉಳಿಸಿ, ಮಗಳನ್ನು ಬೆಳಸಿ ಕಾರ್ಯಕ್ರಮದ ಅಂಗವಾಗಿ ಪ್ರಸವ ಪೂರ್ವ ಲಿಂಗಪತ್ತೆ ತಡೆ ಕಾಯ್ದೆ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಫಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ., ಲಿಂಗ ಪತ್ತೆ ತಂತ್ರಜ್ಞಾನವು ದುರ್ಬಳಕೆಯಾಗಿ ಗರ್ಭಸ್ಥ ಶಿಶು ಹೆಣ್ಣು ಎಂದು ಕಂಡುಬಂದ ತಕ್ಷಣ ಅದನ್ನು ಗರ್ಭದಲ್ಲೇ ಕೊಲೆ ಮಾಡುವ ಪ್ರವೃತ್ತಿ ದೇಶದಾದ್ಯಂತ ಬೆಳೆದು ಬಂದಿದೆ. ಇದರ ಪರಿಣಾಮದಿಂದ ಪುರುಷರು ಮತ್ತು ಮಹಿಳೆಯರ ಅನುಪಾತದಲ್ಲಿ ವ್ಯತ್ಯಾಸಗಳುಂಟಾಗುತ್ತದೆ, ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು, ಆರೋಗ್ಯ ಸಂಸ್ಥೆಗಳು, ಗ್ರಾಮಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಆರೋಗ್ಯ ಕರ್ತೆಯರು, ಚುನಾಯಿತ ಮಹಿಳಾ ಪ್ರತಿನಿಧಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದರೆ ಸ್ತ್ರೀ ಭ್ರೂಣ ಹತ್ಯೆ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ವಹಿಸಿದ್ದರು. ಕಾರ್ಮಿಕಾಧಿಕಾರಿ ವಿಲ್ಮಾ, ನ್ಯಾಯವಾದಿ ನಿಕೇಶ್ ಶೆಟ್ಟಿ, ಮಕ್ಕಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ರೆನ್ನಿ ಡಿ ಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಮಾರು 400 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ್ದರು.