ಹಾಸನ: ನೆರೆ ಹಾನಿಗೆ ಒಳಗಾಗಿರುವ ಸಂತ್ರಸ್ಥ ಜಿಲ್ಲೆಗಳಲ್ಲಿನ ಅಧಿಕಾರಿಗಳು ಪುನರ್ವಸತಿ ಕಾರ್ಯಕ್ಕೆ ಹೆಚ್ಚಿನ ಆಧ್ಯತೆ ನೀಡುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಸಂತ್ರಸ್ಥರ ಪುನರ್ವಸತಿ ಕಾರ್ಯಕ್ರಮ ಪ್ರಗತಿ ಪರಿಶೀಲನೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು ವಿಳಂಬ ಮಾಡದೇ ತುರ್ತಾಗಿ ನೆರೆ ಪರಿಹಾರ ಕಾಮಗಾರಿಗಳನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಹೇಳಿದರು.
ಸಂತ್ರಸ್ಥರನ್ನು ಹೆಚ್ಚು ದಿನಗಳ ಕಾಲ ನಿರಾಶೀತರ ಕೇಂದ್ರಗಳಲ್ಲಿ ಉಳಿಸದೆ ಬೇಗ ಮನೆ ನಿರ್ಮಿಸಲು ಶೀಘ್ರವಾಗಿ ಆರಂಭಿಸಲು ಜಿಲ್ಲಾಧಿಕಾರಿಗಳು ಗಮನಹರಿಸಿ ಎಂದು ಕಂದಾಯ ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಸಮಯ ಸಮೀಪಿಸುತ್ತಿದ್ದು, ಜೊತೆಗೆ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳ ದುರಸ್ಥಿ ಹಾಗೂ ಹೊಸ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ 20 ದಿನಗಳ ಒಳಗಾಗಿ ದುರಸ್ಥಿ ಕಾರ್ಯಗಳನ್ನು ಮುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಅತಿವೃಷ್ಠಿ ಪರಿಹಾರ ಕಾರ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ತುರ್ತಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಹಾಗೂ ಸಂತ್ರಸ್ಥ ಜಿಲ್ಲೆಗಳಿಗೆ ಪುನರ್ವಸತಿ ಕಾರ್ಯಕ್ಕೆ ಹೆಚ್ಚಿನ ಪರಿಹಾರ ಧನದ ಅಗತ್ಯವಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಆರ್. ಅಶೊಕ್ ಅವರು ಹೇಳಿದರು.
ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಸಿ.ಇ.ಒ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಸಂತ್ರಸ್ಥ ಸ್ಥಳಗಳಲ್ಲಿ ನಡೆಯುತ್ತಿರುವ ಪುನರ್ವಸತಿ ಕಾರ್ಯಕ್ರಮದ ಕಾಮಗಾರಿಗಳ ಪರಿಶೀಲನೆ ನಡೆಸಿ ಕಾಲಕಾಲಕ್ಕೆ ವರದಿ ಸಲ್ಲಿಸುವಂತೆ ಕಂದಾಯ ಸಚಿವರು ಹೇಳಿದರು.
ಸಂತ್ರಸ್ಥ ಜಿಲ್ಲೆಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭೇಟಿ ನೀಡಿದ ಸಂದರ್ಭ ನೀಡಿದ ಸಲಹೆ ಹಾಗೂ ನಿರ್ದೇಶನಗಳ ಅನುಪಾಲನೆ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಂದಾಯ ಸಚಿವರು ಹೇಳಿದರು.
ವಿಡಿಯೋ ಸಂವಾದ ಸಭೆಯ ನಂತರ ಮಾತನಾಡಿದ ಜಿಲ್ಲದಿಕಾರಿ ಆರ್. ಗಿರೀಶ್ ಅವರು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಜಿಲ್ಲೆಯಲ್ಲಿ ಉಳಿಕೆ ಇರುವ 39 ಶಾಲೆಗಳಿಗೆ ಹಾಗೂ ಹಾನಿಗೊಳಗಾಗಿರುವ 191 ಅಂಗನವಾಡಿ ಕೇಂದ್ರಗಳ ದುರಸ್ಥಿ ಕಾರ್ಯ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ, ಲೊಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಕಾಶ್, ಕೃಷಿ ಜಂಟಿ ನಿರ್ದೇಶಕ ಮಧುಸೂಧನ್, ಪಿ.ಆರ್.ಈ.ಡಿ.ಯ ಕಾರ್ಯಪಾಲಕ ಅಭಿಯಂತರರಾದ ಆನಂದ್ಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.