ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಂಡ ಜನತಾದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನಲೆಯಲ್ಲಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ನೀಡಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯನ್ನು ಹಾಜರಿರುವಂತೆ ಸೂಚಿಸಲಾಗಿತ್ತು.
ಜನಸ್ಪಂದನ ಕಾರ್ಯಕ್ರಮ ಸಂಬಂಧ ಅಹವಾಲಿನಲ್ಲಿ ಬರುವ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಕಂಡುಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆನ್ಲೈನ್ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು. ಅದರಂತೆ ಇಲ್ಲಿನ ಜಿಲ್ಲಾಧಿಕಾರಿಗಳ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಎಲ್ಲಾ ಹಾಜರಿದ್ದರು.
ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ, ಸಂಡೂರು ತಾಲ್ಲೂಕಿನ ಬಸಾಪುರ ಗ್ರಾಮದ ಭೂಮಿ ಒತ್ತುವರಿ ಸಂಬಂಧಿಸಿದಂತೆ, ಕೆಐಎಡಿಬಿ ಇಲಾಖೆಗೆ ಅಹವಾಲು ಸಲ್ಲಿಕೆಯಾಗಿತ್ತು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆ ಇಲಾಖೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ವಿಲೇವಾರಿಗೆ ಸೂಚಿಸಿದರು.
ಸಾರ್ವಜನಿಕರಿಂದ ಸ್ವೀಕರಿಸಿದ ಅಹವಾಲುಗಳನ್ನು ವಿವಿಧ ಜಿಲ್ಲೆಗಳ ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರ ಕಚೇರಿಯಿಂದ ಆಯಾ ಜಿಲ್ಲೆಗೆ ಸಂಬಂಧಿಸಿದ ಅಹವಾಲುಗಳನ್ನು ಆಯಾ ಜಿಲ್ಲಾ ಕೇಂದ್ರಕ್ಕೆ ರವಾನಿಸಿ ಪರಿಹಾರ ಒದಗಿಸಲು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.