ತ್ರೈಮಾಸಿಕ ಕೆಡಿಪಿ ಸಭೆ. ಕಡ್ಡಾಯವಾಗಿ ಕೋವಿಡ್-19 ಲಸಿಕೆಗೊಳಪಡಲು ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಬೀದರ : ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ಕಡ್ಡಾಯವಾಗಿ ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಕಚೇರಿಯ ಎಲ್ಲ ಸಿಬ್ಬಂದಿಯು ಕೋವಿಡ್ ಲಸಿಕೆ ಪಡೆದುಕೊಂಡಿರುವ ಬಗ್ಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ತಪ್ಪದೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರು ಹೇಳಿದರು.
ಬುಧವಾರ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಇಲಾಖಾವಾರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆಯು ಬೀದರ ಜಿಲ್ಲೆಗೆ ನಿಗದಿಪಡಿಸಿದ ಕೋವಿಡ್ ಲಸಿಕಾಕರಣದ ಗುರಿಸಾಧನೆಗೆ ಒತ್ತು ಕೊಡಬೇಕು. ಇದಕ್ಕೆ ವಿವಿಧ ಇಲಾಖೆಗಳು ಸಹಕಾರ ನೀಡಬೇಕು. ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳ ಜೊತೆಗೆ ಇನ್ನೀತರ ಆರೋಗ್ಯ ಕಾರ್ಯಕ್ರಮಗಳು ಕೂಡ ಜಿಲ್ಲೆಯಲ್ಲಿ ಸರಿಯಾಗಿ ಅನುಷ್ಠಾನವಾಗುವಂತೆ ನೋಡಿಕೊಳ್ಳಬೇಕು ಎಂದು ಕಾರ್ಯದರ್ಶಿಗಳು, ಡಿಎಚ್ಓ ಡಾ.ವಿ.ಜಿ.ರೆಡ್ಡಿ ಅವರಿಗೆ ನಿರ್ದೇಶನ ನೀಡಿದರು.
ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅನುಷ್ಠಾನದ ಬಗ್ಗೆ ಹೆಚ್ಚಿನ ಗಮನ ಕೊಡಬೇಕು. ರೈತ ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರಿಗೆ ಪಿಂಚಣಿ, ಆರೋಗ್ಯ ಕಾರ್ಡ್ ಮತ್ತು ಶಿಕ್ಷಣ ಸೌಕರ್ಯ ಕಲ್ಪಿಸಲು ಒತ್ತು ಕೊಡಬೇಕು ಎಂದು ಕಾರ್ಯದರ್ಶಿಗಳು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಅವರು, ಜಿಲ್ಲೆಯಲ್ಲಿ ಒಟ್ಟು 1,91,203 ರೈತರು ಪ್ರಧಾನ ಮಂತ್ರಿಗಳ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದು, ಕೇಂದ್ರ ಸರ್ಕಾರದಿಂದ ಈಗಾಗಲೇ 9ನೇ ಕಂತಿನವರೆಗೆ 261.02 ಕೋಟಿ ರೂ. ಸಹಾಯಧನ ಜಮೆ ಮಾಡಲಾಗಿದೆ. 2020-21ನೇ ಸಾಲಿನಲ್ಲಿ 58 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ 39 ಪ್ರಕರಣಗಳು ಉಪ ವಿಭಾಗಮಟ್ಟದ ಸಮಿತಿಯಲ್ಲಿ ಅರ್ಹಗೊಂಡ ರೈತ ಕುಟುಂಬಗಳಿಗೆ ತಲಾ ಐದು ಲಕ್ಷದಂತೆ 195 ಲಕ್ಷ ರೂ.ಗಳನ್ನು ರೈತ ಕುಟುಂಬದವರ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 876 ಮಿ ಮೀ ಇದ್ದು, ಇಲ್ಲಿವರೆಗೆ ವಾಡಿಕೆ ಮಳೆಯು 565 ಮಿಮೀ ಆಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಹುಲಸೂರ ತಾಲೂಕಿನಲ್ಲಿ ಮತ್ತು ಅತೀ ಕಡಿಮೆ ಮಳೆ ಹುಮನಾಬಾದ್ ತಾಲೂಕಿನಲ್ಲಿ ಬಿದ್ದಿದೆ. 2021-22ನೇ ಸಾಲಿನಲ್ಲಿ ಶೇ.100 ರಷ್ಟು ಬಿತ್ತನೆಯಾಗಿದೆ. 94,484 ಕ್ವಿಂಟಲ್ ಬಿತ್ತನೆ ಬೀಜಗಳ ವಿತರಣೆಯಾಗಿದೆ. 2021-22ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 2,47,490 ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿಗಳ ಫಸಲ್ ಬಿಮಾ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಮಾತನಾಡಿ, ಈಗ ಶಾಲಾ ಕಾಲೇಜುಗಳ ತರಗತಿಗಳು ಪುನಾರಂಭವಾಗಿವೆ. ಮಳೆಯು ಸುರಿಯುತ್ತಿದೆ. ಹೀಗಾಗಿ ಶಾಲಾ-ಕಾಲೇಜುಗಳ ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ವಿವಿಧೆಡೆ ವಿಫಲವಾದ ಕೊಳವೆಬಾವಿಗಳನ್ನು ಮುಚ್ಚಲು ಸಂಬಂಧಿಸಿದ ಅಧಿÀಕಾರಿಗಳು ಗಮನ ಹರಿಸಬೇಕು ಎಂದು ತಿಳಿಸಿದರು. ಕೈಗಾರಿಕಾ ಪ್ರದೇಶದಂತೆ ಸೇರಿದಂತೆ ನಿಷೇಧಿತ ಯಾವುದೇ ಪ್ರದೇಶಗಳಲ್ಲಿ ಅನುಮತಿ ಪಡೆಯದೇ ಬೋರವೆಲ್ಗಳನ್ನು ಕೊರೆಯಬಾರದು ಎಂದು ತಿಳಿಸಿದರು. ಅನುದಾನ ಲಭ್ಯವಿದ್ದರೂ ಕೆಲವು ಕಾಮಗಾರಿಗಳನ್ನು ಆರಂಭಿಸದೇ ಇರುವುದು ಸರಿಯಲ್ಲ ಎಂದು ಕೆಆರ್ಐಡಿಎಲ್ ಅಭಿಯಂತರರಿಗೆ ಎಚ್ಚರಿಕೆ ನೀಡಿದರು.
ಈ ವೇಳೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ.ಬ್ಯಾಕೋಡ್ ಅವರು ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಲು ಕ್ರಮ ವಹಿಸಲಾಗಿದೆ. ಪೊಲೀಸ್ ಕುಟುಂಬ ವರ್ಗದವರಿಗೆ ವಿಶೇಷ ಶಿಬಿರ ನಡೆಸಿ ಕೋವಿಡ್ ಲಸಿಕೆ ಹಾಕಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ಕಡೆಗಳಲ್ಲಿ ತೆರೆದಿರುವ ಎಲ್ಲಾ ಚೆಕ್ಪೋಸ್ಟಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಜಹೀರಾ ನಸೀಮ್, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಾಟೀಲ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸೂರ್ಯಕಾಂತ ಎಸ್, ಯೋಜನಾ ನಿರ್ದೇಶಕರಾದ ವಿಜಯಕುಮಾರ ಮಡ್ಡೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.