ಮಂಗಳೂರು: ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ಮೀನುಗಾರರಿಗೆ ಪ್ರತಿದಿನ 500 ಲೀ. ಡೀಸೆಲ್ ನೀಡುವ ಭರವಸೆ; ಕಾಂಗ್ರೆಸ್ನ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್ ಗಾಂಧಿ
ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ನಗರ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಎದುರಿನ ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕಾಂಗ್ರೆಸ್ ಪಕ್ಷದ 5ನೇ ಗ್ಯಾರಂಟಿಯನ್ನು ಪ್ರಕಟಿಸಿದರು.
ಬಿಜೆಪಿ ಸರಕಾರ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರದ ಮೂಲಕ ಈ ರಾಜ್ಯದ ಮಹಿಳೆಯರ ಹಣವನ್ನು ಕಸಿದುಕೊಂಡಿದೆ. ಆ ಹಣವನ್ನು ಈ ರಾಜ್ಯದ ಮಹಿಳೆಯರಿಗೆ ನಾವು ಮರಳಿಸಲಿದ್ದೇವೆ ಎಂದ ರಾಹುಲ್ ಗಾಂಧಿ, ಅದೇ ಹಣದಲ್ಲಿ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸುತ್ತೇವೆ ಎಂದು ಭರವಸೆ ನೀಡಿದರು.
ಅಧಿಕಾರಕ್ಕೆ ಬಂದ ಮೊದಲಸಚಿವ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಹುಲ್ ಹೇಳಿದರು.
ದೇಶದಲ್ಲಿ 40 ಕೋಟಿ ಜನ ಬಡತನ ರೇಖೆಗಿಂತ ಕೆಳಗಿಳಿದಿದ್ದಾರೆ. ಶೇ.ಒಂದರಷ್ಟು ಜನರಲ್ಲಿ ಶೇ.40 ಸಂಪತ್ತು ಶೇಖರಣೆಯಾಗಿದೆ. 90 ಲಕ್ಷಸಣ್ಣ ಮಧ್ಯಮ ಕೈಗಾರಿಕೆಗಳು ಸಂಪೂರ್ಣ ಮುಚ್ಚಿವೆ.1.4 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡರು. ಪ್ರಧಾನಿ ಮೋದಿ ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಆದರೆ ಅದಾನಿಗೆ ನೀಡಿದ ಎಲ್ಲ ಭರವಸೆ ಈಡೇರಿಸಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಮಾತನಾಡಿ, ಕರಾವಳಿಯ ಸೌಹಾರ್ದವನ್ನು ಕದಡಿದ ಕೋಮುವಾದಿ ಬಿಜೆಪಿಯನ್ನು ಸೋಲಿಸಿ, ಇಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸಲು ಕಾಂಗ್ರೆಸನ್ನು ಬೆಂಬಲಿಸಿ ಎಂದು ಕರೆ ನೀಡಿದರು.
ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯನ್ನು ಬೆಂಬಲಿಸಿದವರಿಗೂ ಅದು ನೆರವು ನೀಡಿಲ್ಲ. ರೈತರ ಬದುಕಿನಲ್ಲಿ ಬದಲಾವಣೆಯಾಗಿಲ್ಲ. ಅನೇಕ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ ಆಗ್ತಾ ಇಲ್ಲ. ಹೂಡಿಕೆ ಆಗ್ತಾ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರಾವಳಿಗೆ ಪ್ರತ್ಯೇಕವಾಗಿ ಬಜೆಟ್ನಲ್ಲಿ ಯೋಜನೆ ರೂಪಿಸಲಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಯಕ್ರಮ ಅನುಷ್ಠಾನ ಮಾಡುವ ಭರವಸೆ ನೀಡುತ್ತೇನೆ. ನುಡಿದಂತೆ ನಡೆಯದಿದ್ದರೆ ಇನ್ನೊಂದು ಬಾರಿ ಮತ ಯಾಚಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಸಮಾರಂಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಕ್ತಾರ ಚರಣ್ ಸಿಂಗ್ ಸಪ್ರಾ, ಕೆಪಿಸಿಸಿ ರಾಜ್ಯ ಉಸ್ತುವಾರಿ ರೋಜಿ ಎಂ. ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮುಖಂಡರಾದ ಯು.ಟಿ.ಖಾದರ್, ಬಿ.ಕೆ. ಹರಿಪ್ರಸಾದ್, ಮಂಜುನಾಥ ಭಂಡಾರಿ, ಬಿ.ಇಬ್ರಾಹೀಂ, ಕೆ.ಅಭಯಚಂದ್ರ ಜೈನ್, ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ, ಅಲ್ಲಾಜ್ ಕೆ.ಎಸ್. ಮುಹಮ್ಮದ್ ಮಸೂದ್, ಇಬ್ರಾಹೀಂ ಕೋಡಿಜಾಲ್, ಜಿ.ಎ.ಬಾವ, ಭರತ್ ಮುಂಡೋಡಿ, ಲುಕ್ಲಾನ್ ಬಂಟ್ವಾಳ, ಶಾಲೆಟ್ ಪಿಂಟೊ, ಮಮತಾ ಗಟ್ಟಿ, ಕೃಪಾ ಅಮರ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು. ಬಡಗನ್ನೂರು ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು ನೆನಪಿಸಿದ ರಾಹುಲ್: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಮಂಗಳೂರು ವಿಮಾನ ನಿಲ್ದಾಣ, ಬಂದರು ಎಂಸಿಎಫ್ ನಂತಹ ಕಾರ್ಖಾನೆ ಯನ್ನು ಇಲ್ಲಿ ಸ್ಥಾಪನೆ ಮತ್ತು ಅಭಿವೃದ್ಧಿ ಮಾಡಿರುವುದು ನನಗೆ ಗೊತ್ತಿದೆ. ಇಲ್ಲಿನ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ ಕೊಡುಗೆ ನೀಡಿದ್ದಾರೆ. ಅಂತಹ ಬ್ಯಾಂಕ್ಗಳನ್ನು ಮೋದಿ ಸರಕಾರ ವಿಲೀನದ ಹೆಸರಲ್ಲಿ ಇಲ್ಲವಾಗಿಸಿದೆ. ವಿಮಾನ ನಿಲ್ದಾಣವನ್ನು ಅದಾನಿಗೆ ನೀಡಿ ಇಲ್ಲಿನ ಜನರನ್ನು ವಂಚಿಸಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.