ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ವಿವರ ಸಲ್ಲಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ:ಜಿಲ್ಲೆಯಲ್ಲಿ ಸಾರ್ವಜನಿಕ ಉದ್ಯಾನಗಳು ಹಾಗೂ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಹೈಕೋರ್ಟ್ ಸೂಚನೆ ನೀಡಿದ್ದು, ಜಿಲ್ಲೆಯಲ್ಲಿರುವ ಅಂತಹ ಕಟ್ಟಡಗಳ ಇತ್ತೀಚಿನ ಮಾಹಿತಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 2009ರ ಡಿಸೆಂಬರ್ ಬಳಿಕ ನಿರ್ಮಿಸಲಾಗಿರುವ ಅಂತಹ ಧಾರ್ಮಿಕ ಕಟ್ಟಡಗಳನ್ನು ತಕ್ಷಣ ತೆರವುಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ. 2009ರ ಡಿಸೆಂಬರ್ ಪೂರ್ವದಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳಿಂದ ಸಾರ್ವಜನಿಕರಿಗೆ ತೊಂದರೆಯಿಲ್ಲದಿದ್ದರೆ ಸಕ್ರಮಗೊಳಿಸಲು ಅವಕಾಶವಿದೆ. ಇಲ್ಲದಿದ್ದರೆ ಅಂತಹ ಕಟ್ಟಡದಲ್ಲಿರುವ ವಿಗ್ರಹಗಳು, ಧಾರ್ಮಿಕ ಸಂಕೇತಗಳನ್ನು ತೆರವುಗೊಳಿಸಿ ಕಟ್ಟಡ ನೆಲಸಮಗೊಳಿಸಲು ನ್ಯಾಯಾಲಯ ಸೂಚನೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೊಸದಾಗಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟು 248 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲಾಗಿದೆ. ಇದರಲ್ಲಿ 6 ಸಾರ್ವಜನಿಕ ಸ್ಥಳಗಳಲ್ಲಿ, 19 ಉದ್ಯಾನಗಳಲ್ಲಿ ಹಾಗೂ 219 ರಸ್ತೆಗಳಲ್ಲಿವೆ. ಇದರಲ್ಲಿ ಶಿವಮೊಗ್ಗ ತಾಲೂಕು 59, ಭದ್ರಾವತಿ 11, ತೀರ್ಥಹಳ್ಳಿ 14, ಸಾಗರ 30, ಶಿಕಾರಿಪುರ 60, ಸೊರಬ 44 ಹಾಗೂ ಹೊಸನಗರದಲ್ಲಿ 26 ಇವೆ. ಇವುಗಳ ಪೈಕಿ 20 ಕಟ್ಟಡಗಳನ್ನು ತೆರವುಗೊಳಿಸಲಾಗಿದ್ದು, 224 ತೆರವುಗೊಳಿಸಲು ಬಾಕಿಯಿವೆ. 91 ಪ್ರಕರಣಗಳನ್ನು ಸಕ್ರಮಗೊಳಿಸಲಾಗಿದ್ದು, ಒಂದು ಪ್ರಕರಣ ನ್ಯಾಯಾಲಯದಲ್ಲಿದ್ದು, ಪ್ರಸ್ತುತ 129 ಕಟ್ಟಡಗಳನ್ನು ತೆರವುಗೊಳಿಸಬೇಕಾಗಿದೆ. ಸರ್ಕಾರದ ಆದೇಶದ ಪ್ರಕಾರ ಪ್ರತಿಯೊಂದು ಪ್ರಕರಣಗಳನ್ನು ಪರಿಶೀಲಿಸಿ ಎರಡು ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ನಗರ ಪ್ರದೇಶವಾರು ಹಾಗೂ ಗ್ರಾಮ ಪಂಚಾಯತ್ವಾರು ಪಟ್ಟಿಯನ್ನು ಛಾಯಾಚಿತ್ರ ಸಹಿತ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕು. ಒಂದು ವೇಳೆ ಸಕ್ರಮಗೊಳಿಸಬಹುದಾದರೆ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಬೇಕು. 2009ರ ಡಿಸೆಂಬರ್ ಬಳಿಕ ನಿರ್ಮಾಣಗೊಂಡಿರುವ ಧಾರ್ಮಿಕ ಕಟ್ಟಡಗಳನ್ನು ತಕ್ಷಣ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು