ರಿಮ್ಸ್ ಆಸ್ಪತ್ರೆಯ ಸಮಸ್ಯೆಗಳಿಗೆ ಶೀಘೃದಲ್ಲಿ ಪರಿಹಾರ. ವೈದ್ಯರ ನೇಮಕಾತಿಗೆ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ: ಸಚಿವ ಹಾಲಪ್ಪ
ರಾಯಚೂರು : ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ನಿಯಂತ್ರಣಕ್ಕೆ ರಿಮ್ಸ್ ಹಾಗೂ ಓಪೆಕ್ ಆಸ್ಪತ್ರೆಯಲ್ಲಿ ಮಕ್ಕಳ ತುರ್ತು ನಿಗಾ ಘಟಕ ಆರಂಭ ಮಾಡಲಾಗಿದೆ.
ಹೆಚ್ಚುವರಿಯಾಗಿ ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿ ಸಮಸ್ಯೆಗೆ ಶೀಘ್ರದಲ್ಲೇ ವೈದ್ಯಕೀಯ ಸಚಿವರೊಂದಿಗೆ ಸೆಭೆ ನಡೆಸಿ ನೇಮಕಾತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಆಚಾರ ಹಾಲಪ್ಪ ಅವರು ಹೇಳಿದರು.
ಸೋಮವಾರ ನಗರದ ರಿಮ್ಸ್ ಆಸ್ಪತ್ರೆಯ ಮೂರನೆಯ ಮಹಡಿಯಲ್ಲಿ ಶಿಲ್ಪಾ ಫೌಂಡೇಶನ್ ಸಹಯೋಗದಲ್ಲಿ ನಿರ್ಮಿಸಲಾದ ಮಕ್ಕಳ ತುರ್ತು ಚಿಕಿತ್ಸಾ ಘಟಕ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಡೆಂಗ್ಯೂ ಮತ್ತು ಚಿಕನ್ ಗುನ್ಯಾ ರೋಗ ನಿಯಂತ್ರಣಕ್ಕೆ ಬೇಕಾದ ಚಿಕಿತ್ಸೆಗೆ ಹೆಚ್ಚುವರಿ 120ಹಾಸಿಗೆಗಳ ಘಟಕ ನಿರ್ಮಾಣ ಮಾಡಲಾಗಿದೆ. ಸರ್ಕಾರದೊಂದಿಗೆ ಶಿಲ್ಪಾ ಫೌಂಡೇಶನ್ ಕೈಜೋಡಿಸಿ ಉತ್ತಮ ಮಕ್ಕಳ ಚಿಕಿತ್ಸಾ ಘಟಕ ಆರಂಭ ಮಾಡಲಾಗಿದೆ. ಈಗಾಗಲೇ ಉದ್ಘಾಟನಾ ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯ ಆರೋಗ್ಯ ಕ್ಷೇತ್ರದ ಸುಧಾರಣೆಗೆ ಬೇಕಾದ ಕ್ರಮ ಕೈಗೊಳ್ಳಲಾಗಿದೆ ಎಂದರು.
ಈ ವೇಳೆ ಸಂಸದ ರಾಜಾ ಅಮರೇಶ್ವರ ನಾಯಕ, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಪಾಟೀಲ್, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ನಾಗರಾಜ್, ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಬಸವರಾಜ ಪೀರಾಪೂರ, ರಾಯಚೂರು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್, ಸೇರಿದಂತೆ ಇತರರು ಇದ್ದರು.