ಕಾರವಾರ: ಕೋವಿಡ್-19 ಕಾರಣದಿಂದ 2022 ರ ಗಣರಾಜ್ಯೋತ್ಸವನ್ನು ಕೂಡ ಸರಳ ರೀತಿಯಲ್ಲಿ ಹೆಚ್ಚು ಜನರು ಸೇರದಂತೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಹೇಳಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಂಭಾಂಗಣದಲ್ಲಿ ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್-19ದಿಂದಾಗಿ ಈ ಬಾರಿಯ ಗಣರಾಜ್ಯೋತ್ಸವನ್ನು ಕೂಡಾ ಹೆಚ್ಚು ಜನರು ಸೇರದಂತೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿರುತ್ತದೆ ಎಂದರು.
ಶಾಲಾ ಕಾಲೇಜಿನ ಮಕ್ಕಳಿಗೆ ಪರೇಡ್ನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲಾ ಅಲ್ಲದೇ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಪರೇಡ್ನಲ್ಲಾಗಲಿ ಅಥವಾ ಶಾಲಾ ಕಾಲೇಜು, ರಂಗಮಂದಿರದಲ್ಲಾಗಲಿ ನಡೆಸುವುದನ್ನು ಈ ಬಾರಿ ಕೂಡ ಕೈ ಬಿಡಬೇಕೆಂದು ಡಿ ಡಿ ಪಿ ಐ ಅವರಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಎಚ್.ಕೆ ಕೃಷ್ಣಮೂರ್ತಿ ಅವರು ಮಾತನಾಡಿ ಗಣರಾಜ್ಯೋತ್ಸವನ್ನು 200 ಜನರಿಗೆ ಸೀಮಿತಗೊಳೊಸಿ ಸರಳವಾಗಿ ಆಚರಿಸಲಾಗುತ್ತಿದ್ದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. 7 ಗಂಟೆಗೆ ಜಿಲ್ಲಾಧಿಕಾರಿಯವರ ವಸತಿ ಗೃಹದಲ್ಲಿ ಹಾಗೂ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಬೇಕು. 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಧ್ವಜಾರೋಹಣ ನಡೆಯಲಿದೆ.
ರಾಷ್ಟ್ರೀಯ ಹಬ್ಬಕ್ಕೆ ಯಾವುದೇ ಚ್ಯುತಿ ಬರದಂತೆ ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಗಳ ಹೊಣೆಗಾರಿಕೆಯನ್ನು ಹೊತ್ತು ಅಧಿಕಾರಿ ಮತ್ತು ಸಿಬಂದ್ಧಿ ಕಾರ್ಯನಿರ್ವಹಿಸಬೇಕೆಂದರು.
ಈ ಸಂರ್ಭದಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಡಾ. ಎಸ್ ಬದರಿನಾಥ ಹಾಗೂ ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೊಡ ಹಾಗೂ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.