ಕಾರವಾರ: ಇದೇ ಮಾರ್ಚ 4 ರಿಂದ ಪ್ರಾರಂಭವಾಗುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ 14279 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ತಿಳಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲಾ ವಿಭಾಗದಲ್ಲಿ 3969, ವಾಣಿಜ್ಯ 6536, ವಿಜ್ಞಾನ 3774 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ ಹೊಸದಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 12425, ಮರು ಪರೀಕ್ಷೆ ಬರೆಯಲಿರುವರು 1122 ಹಾಗೂ ಖಾಸಗಿ 732 ವಿದ್ಯಾರ್ಥಿಗಳಿರುವರು. 6286 ಬಾಲಕರು ಮತ್ತು 7993 ಬಾಲಕಿಯರು ಸೇರಿದಂತೆ ಒಟ್ಟಾರೆಯಾಗಿ 14279 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 30 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಎಲ್ಲಾ ಕೇಂದ್ರಗಳಲ್ಲೂ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆಸಲು ಪೂರ್ವ ಸಿದ್ದತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದ್ದು, ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮತ್ತು ಸಹ ಅಧೀಕ್ಷಕರು ಮತ್ತೊಮ್ಮೆ ಪರಿಶೀಲಿಸಿ ಯಾವುದೇ ಲೋಪದೋಶಗಳು ಉಂಟಾಗದಂತೆ ನೋಡಿಕೊಳ್ಳುವುದು ಅವರ ಕರ್ತವ್ಯವಾಗಿರುತ್ತದೆ ಎಂದರು.
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಪೋನ್ ತರುವುದು/ಬಳಸುವುದು ವಿದ್ಯಾರ್ಥಿಗಳು ಸೇರಿದಂತೆ ಪರೀಕ್ಷೆಗೆ ನಿಯೋಜಿಸಲ್ಪಟ್ಟ ಸಿಬ್ಬಂದಿಗೂ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತುರ್ತು ಅಗತ್ಯ ಸಂಧರ್ಭದಲ್ಲಿ ಮಾತ್ರ ಬೆಸಿಕ್ ಸೆಟ್ ಮೊಬೈಲ್ (ಕ್ಯಾಮರಾ ಇಲ್ಲದ) ಪೋನ್ ಅನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಬಳಸಲು ಅನುಮತಿ ಇರುತ್ತದೆ ಎಂದು ತಿಳಿಸಿದರು.
ಜಿಲ್ಲೆಯು ಪ್ರತಿವರ್ಷದ ಪರೀಕ್ಷೆಗಳಲ್ಲಿ ಒಳ್ಳೆಯ ಶೈಕ್ಷಣಿಕ ಹಿನ್ನಲೆಯನ್ನು ಹೊಂದಿದ್ದು, ಈ ಬಾರಿಯೂ ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಶಿರಸಿ ಸಹಾಯಕ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಅಜೀತ್ ಹಾಗೂ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎನ್. ಹೇಗಡೆ ಸೇರಿದಂತೆ ವಿವಿಧ ಪಿ.ಯು ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.