ಶಿಡ್ಲಘಟ್ಟ: ರಾಜ್ಯದ ಕಾಂಗ್ರೆಸ್ ಆಡಳಿತದಲ್ಲಿ ಜನರಿಗೆ ರಕ್ಷಣೆಯಿಲ್ಲದಂತಾಗಿದೆ-ಬಿ.ಜೆ.ಪುಟ್ಟಸ್ವಾಮಿ
ಶಿಡ್ಲಘಟ್ಟ,ಆಗಸ್ಟ್23: ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಅಧಿಕಾರಿಗಳು ಮತ್ತು ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಆರೋಪಿಸಿದರು.
ನಗರದ ಬಿಜೆಪಿ ಕಛೇರಿಯಲ್ಲಿ ಕರ್ಣಶ್ರೀ ಚಾರಿಟಬಲ್ ಟ್ರಸ್ಟ್ನ ಮೂಲಕ ಪರಿಸರ ಗಣಪತಿ ಮೂರ್ತಿ ಮತ್ತು ಗಿಡಗಳನ್ನು ವಿತರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಅಲೆಯಿಂದ ಹತಾಷಗೊಂಡಿರುವ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೇಸಿಗರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೂರಿಸುವ ಮೂಲಕ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಮಾಣಿಕ ಕೆಎಎಸ್-ಐಎಎಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸದಂತೆ ಮೂಲೆ ಗುಂಪು ಮಾಡುತ್ತಿದ್ದಾರೆ ಭ್ರಷ್ಟಾಚಾರದ ವಿರುದ್ಧ ದನಿ ಎತ್ತುವ ಐಎಎಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ವರ್ಗಾವಣೆ ಮಾಡಲಾಗುತ್ತಿದೆ ರಾಜ್ಯ ಸರಕಾರ ಮತ್ತು ಕಾಂಗ್ರೇಸಿಗರಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಬೇಕಿಲ್ಲ ಇವರ ತಾಳಕ್ಕೆ ತಕ್ಕಂತೆ ಕುಣಿಯುವವರು, ಭ್ರಷ್ಟ ಅಧಿಕಾರಿಗಳು ಸಾಕು ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ದೇಶದಲ್ಲೇ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನಗಳಿಸಿರುವುದೇ ದೊಡ್ಡ ಸಾಧನೆ ಎಂದು ಲೇವಡಿ ಮಾಡಿದರು.
ಈ ಸಂದರ್ಭದಲ್ಲಿ ಭಾಜಪ ಮುಖಂಡ ಕರ್ಣಶ್ರೀ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಿ.ಆರ್.ಶಿವಕುಮಾರ್ಗೌಡ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀರಾಮರೆಡ್ಡಿ,ಸುರೇಂದ್ರಗೌಡ,ರಾಜ್ಯ ಸ್ಲಂ ಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್,ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್,ಮಂಜುಳಮ್ಮ,ಸುಜಾತಮ್ಮ ಮತ್ತಿತರರು ಉಪಸ್ಥಿತರಿದ್ದರು.
ಶಿಡ್ಲಘಟ್ಟದ ಬಿಜೆಪಿ ಕಛೇರಿಯಲ್ಲಿ ಕರ್ಣಶ್ರೀ ಚಾರಿಟಬಲ್ ಟ್ರಸ್ಟ್ನ ಮೂಲಕ ಪರಿಸರ ಗಣಪತಿ ಮೂರ್ತಿ ಮತ್ತು ಗಿಡಗಳನ್ನು ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ವಿತರಿಸಿದರು.