ಶಿಡ್ಲಘಟ್ಟ,ಜುಲೈ22: ಮನುಷ್ಯನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ ಅದರ ಪರಿಣಾಮ ಸಕಾಲದಲ್ಲಿ ಮಳೆಬೆಳೆಗಳಾಗದೆ ರೈತರು ಮತ್ತು ಜನಸಾಮಾನ್ಯರು ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ ಎಂದು ಮುಖ್ಯ ಶಿಕ್ಷಕ ಎನ್.ಶವಶಂಕರಪ್ಪ ಕಳವಳ ವ್ಯಕ್ತಪಡಿಸಿದರು.
ನಗರದ ಕೋಟೆ ಸರಕಾರಿ ಹಿರಿಯ ಪ್ರಾಥಮಿಕ ಬಾಲಕೀಯರ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಮಾಜದಲ್ಲಿರುವ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸದಿದ್ದ ಪಕ್ಷದಲ್ಲಿ ಭವಿಷ್ಯ ಉಸಿರಾಟಕ್ಕೆ ಕೃತಕ ವ್ಯವಸ್ಥೆ ಮಾಡಬೇಕಾದ ಪರಿಸ್ಥತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗಿಡ-ಮರಗಳನ್ನು ಬೆಳೆಸುವುದರಿಂದ ಶುಧ್ಧ ಗಾಳಿ ದೊರೆಯುವ ಜೊತೆಗೆ ಸಕಾಲದಲ್ಲಿ ಮಳೆಬೆಳೆಗಳಾಗುತ್ತದೆ ಇದರಿಂದ ರೈತರು ಮತ್ತು ಜನಸಾಮಾನ್ಯರು ಸಮೃಧ್ಧಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ ಯಾವ ಪ್ರದೇಶದಲ್ಲಿ ಮರಗಿಡಗಳು ಸಮೃಧ್ಧಿಯಾಗಿ ಬೆಳೆದಿರುತ್ತದೆ ಆ ಭಾಗದಲ್ಲಿ ಉತ್ತಮವಾಗಿ ಮಳೆ ಮತ್ತು ಶುಧ್ದ ಗಾಳಿ ಲಭಿಸುತ್ತದೆ ಎಂದ ಅವರು ಪ್ರತಿಯೊಂದು ಮನೆಯಂಗಳ ಮತ್ತು ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರುಣಿಸಿ ಪೋಷಿಸಿ ಪರಿಸರವನ್ನು ಸಂರಕ್ಷಣೆ ಮಾಡಬೇಕೆಂದು ಕರೆ ನೀಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಮೇಲ್ವಿಚಾರಕ ಶಶಿಕುಮಾರ್ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ವೀರೇಂದ್ರ ಹೆಗಡೆನವರ ಸೂಚನೆಯಂತೆ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ 2 ಲಕ್ಷ ಗಿಡಗಳನ್ನು ನೆಡುವ ಯೋಜನೆಯನ್ನು ರೂಪಿಸಲಾಗಿದೆ ಶಿಡ್ಲಘಟ್ಟ ತಾಲೂಕಿನಲ್ಲಿ 18 ಪ್ರದೇಶಗಳಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಿ 500 ಗಿಡಗಳನ್ನು ನೆಡುವ ಜೊತೆಗೆ 25 ಸಾವಿರ ಬೀಜದ ಉಂಡೆಗಳನ್ನು ತಯಾರಿಸಿ ಭೂಮಿಯಲ್ಲಿ ಎಸೆಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಗ್ರಾಮಸ್ಥರು ಮತ್ತು ನಾಗರಿಕರು ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಮೂಲಕ ಪರಿಸರವನ್ನು ಸಂರಕ್ಷಣೆ ಮಾಡಲು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡುವ ಜೊತೆಗೆ ಗಿಡಗಳನ್ನು ಪ್ರತಿನಿತ್ಯ ನೀರುಣಿಸಿ ಪೋಷಣೆ ಮಾಡುವ ಜವಾಬ್ದಾರಿಯನ್ನು ನಿರ್ವಹಿಸಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಧೃಡಸಂಕಲ್ಪ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರಾದ ಲತಾ,ಪ್ರಭಾವತಿ,ಶೈಲಜ,ಸಿ.ಎನ್.ವೀಣಾ,ಶಾಲಾಭಿವೃಧ್ಧಿ ಸಮಿತಿಯ ಸದಸ್ಯೆ ಸುಮೇರಾ, ವೆಂಕಟಲಕ್ಷ್ಮಮ್ಮ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸೇವಾ ಪ್ರತಿನಿಧಿ ಅರ್ಷಿಯಾ,ಫಹೀಮುನ್ನೀಸಾ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.