ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಸ್ವಯಂ ಅರ್ಜಿ ದಾಖಲಿಸಿದ ಹೈಕೋರ್ಟ್
ಬೆಂಗಳೂರು: ರಾಜ್ಯ ವ್ಯಾಪಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಉಂಟಾಗಿರುವ ಕುರಿತು ಸ್ವತಃ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿಕೊಂಡಿದೆ.
ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ಕೃಷ್ಣಎಸ್, ದೀಕ್ಷಿತ್ ಅವರಿದ್ದ ನ್ಯಾಯಪೀಠ, ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಸಂಬಂಧ ವರದಿ ಪ್ರಕಟವಾಗಿದೆ ಎಂದು ಪ್ರಸ್ತಾಪಿಸಿತು. ಇದನ್ನೇ ಆಧರಿಸಿ ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸೂಚನೆ ನೀಡಿದೆ.
ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ನ್ಯಾಯವಾದಿ ಶ್ರೀಧರ್ ಪ್ರಭು ಅವರನ್ನು ಅಮೈಕಾಸ್ ಕ್ಯೂರಿಯನ್ನಾಗಿ ನೇಮಕ ಮಾಡಿದೆ. ಅವರ ಸಹಾಯಕರನ್ನಾಗಿ ನ್ಯಾಯವಾದಿ ವಚನ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಕ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್ಸ್, 1,517 ಫಾರ್ಮಸಿ ಸಿಬ್ಬಂದಿ, 1,752 ಸಹಾಯಕರು 3,253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ಅ.16ರಂದು ಪತ್ರಿಕೆವೊಂದರಲ್ಲಿ ವರದಿ ಪ್ರಕಟವಾಗಿತ್ತು.