ಶೃಂಗೇರಿ:: ಕಾರ್ಯಕ್ರಮವೊಂದರಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯನ್ನು ಆಹ್ವಾನಿಸು ವಿಷಯಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಲ್ಲಿ ಇಲ್ಲಿನ ಎಬಿವಿಪಿ ಕಾರ್ಯಕರ್ತನ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆಗೆ ಶರಣಾದ ಘಟನೆ ಜರಗಿದೆ.
ಆತ್ಹಹತ್ಯಗೆ ಶರಣಾದ ಎಬಿವಿಪಿ ವಿದ್ಯಾರ್ಥಿ ಯನ್ನು ಶೃಂಗೇರಿಯ ಜೆಸಿಬಿಎಂ ಕಾಲೇಜಿನ ಬಿಕಾಂ ವಿದ್ಯಾರ್ಥಿ ಅಭಿಷೇಕ್(21) ಎಂದು ಗುರುತಿಸಲಾಗಿದೆ.
ಜನವರಿ 7ರಂದು ಶೃಂಗೇರಿಯಲ್ಲಿ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕೆ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯನ್ನು ಆಹ್ವಾನಿಸಲಾಗಿತ್ತು. ಆದರೆ ಸೂಲೆಬೆಲೆ ಬರುವುದನ್ನು ವಿರೋಧಿಸಿ ಎನ್ಎಸ್ಯುಐ ಕಾರ್ಯಕರ್ತರು ಜ.7ರಂದು ಪತ್ರಿಕಾಗೋಷ್ಠಿ ಕರೆದಿದ್ದರು. ಈ ವಿಚಾರವಾಗಿ ಎಬಿವಿಪಿ ಮತ್ತು ಎನ್ಎಸ್ಯುಐ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಗಲಾಟೆಗೆ ಸಂಬಂಧಿಸಿ ಅಭಿಷೇಕ್ ಸೇರಿದಂತೆ ನಾಲ್ವರು ಎಬಿವಿಪಿ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸ್ ದೂರು ದಾಖಲಾಗಿದ್ದರಿಂದ ಬೇಸತ್ತಿದ್ದ ಅಭಿಷೇಕ್, ಪ್ರಕರಣದಿಂದಾಗಿ ‘‘ನನ್ನ ಲೈಫೇ ಹಾಳಾಯಿತು’’ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಕಾಲೇಜು ಬಹಿಷ್ಕಾರ
ಎಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಶೃಂಗೇರಿ ತಾಲೂಕಿನಾದ್ಯಂತ ಎಲ್ಲ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶೃಂಗೇರಿಯ ಜೆೆಸಿಬಿಎಂ ಕಾಲೇಜು ಮುಂಭಾಗದಲ್ಲಿ ಸೇರಿರುವ ವಿದ್ಯಾರ್ಥಿಗಳು ಅಭಿಷೇಕ್ ಆತ್ಮಹತ್ಯೆಗೆ ಕಾರಣವಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.