ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ಗುರುವಾರ ಹೊಸದಿಲ್ಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಸಂಘಟನಾ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಸುರ್ಜೇವಾಲ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ನೂತನ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಮಾಡಿದ್ದಾರೆ' ಎಂದು ಪ್ರಕಟಿಸಿದರು.
ನೂತನ ಸರಕಾರದಲ್ಲಿ ಡಿಕೆಶಿ ಒಬ್ಬರು ಮಾತ್ರ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಅಲ್ಲದೆ, ಮುಂದಿನ ಲೋಕಸಭಾ ಚುನಾವಣೆಯವರೆಗೆ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.
ಮೇ 20ರಂದು ಮಧ್ಯಾಹ್ನ 12:30ಕ್ಕೆ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯೊಂದಿಗೆ ಹಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ನಾಯಕರು ರಾಜ್ಯವನ್ನು ಮುನ್ನಡೆಸಲು ಸಮರ್ಥರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಹಲವಾರು ಮಂದಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಸಾಮರ್ಥ್ಯ ಇರುವವರು ಇದ್ದಾರೆ. ಆದರೆ, ಒಬ್ಬರಿಗೆ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯ. ಆದುದರಿಂದ, ಎಐಸಿಸಿ ಅಧ್ಯಕ್ಷರು ಸಿದ್ದರಾಮಯ್ಯರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.
ಈ ಚುನಾವಣೆಯು ಬಡವರು ಮತ್ತು ಶ್ರೀಮಂತರ ನಡುವಿನ ಸಮರವಾಗಿತ್ತು. ನಮ್ಮ ಪಕ್ಷ ಬಡವರು ಹಾಗೂ ಮಧ್ಯಮ ವರ್ಗ ದವರ ಪರವಾಗಿ ನಿಂತಿತ್ತು. ಈ ಗೆಲುವಿಗಾಗಿ ನಮ್ಮ ಪಕ್ಷದ ನಾಯಕ ರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಅನೇಕ ಹಿರಿಯ ನಾಯಕರು ಶ್ರಮಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದು ವೇಣುಗೋಪಾಲ್ ಹೇಳಿದರು.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ನಡೆಸಿದ ಭಾರತ್ ಜೋಡೊ ಯಾತ್ರೆಯು ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಬರೆಯಿತು. ಪ್ರಿಯಾಂಕಾ ಗಾಂಧಿ ನಡೆಸಿದಂತಹ ಪ್ರಚಾರ ಸಭೆಗಳು, ರೋಡ್ ಶೋಗಳಿಗೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿತು ಎಂದು ವೇಣುಗೋಪಾಲ್ ಹೇಳಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, 'ಸಿದ್ದರಾಮಯ್ಯ ಒಬ್ಬ ಅನುಭವಿ ರಾಜಕಾರಣಿ, ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಸಂಘಟಿಸಿ, ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ ಎಂದು ನುಡಿದರು.
ಪ್ರಮಾಣವಚನಕ್ಕೆ ಸೋನಿಯಾ, ರಾಹುಲ್ ಗೆಹೋಟ್, ನಿತೀಶ್, ಮಮತಾ ಸಹಿತ 8 ಸಿಎಂಗಳು ಭಾಗಿ: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಹಾರ ಸಿಎಂ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹೋಟ್ ಸೇರಿ ಹಲವು ಗಣ್ಯರು ಆಗಮಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಛತೀಸ್ಗಡ, ಪಾಂಡಿಚೇರಿ, ಜಾರ್ಖಂಡ್ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದು, ಝಡ್ ಪ್ಲೆಸ್ ಭದ್ರತೆಯುಳ್ಳ ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತಿದೆ.