ಬೀದರ : ಮಾರುಕಟ್ಟೆಯಲ್ಲಿ ಲಾಭದಾಯಕ ಎಣ್ಣೆ ಕಾಳು ಬೆಳೆ ಎಂದು ಗುರುತಿಸಿಕೊಂಡಿರುವ ಸೋಯಾಬಿನ್ ಬೆಳೆಯನ್ನು ಬೀದರ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣ 2,02,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿರುವುದು ಪ್ರಗತಿಯ ಲಕ್ಷಣವಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ರೈತರಿಗೆ ಮಾರುಕಟ್ಟೆ ತುಂಬಾ ಮುಖ್ಯ. ನಾವು ಇದನ್ನು ಅರಿಯಬೇಕು. ದೇಶದಲ್ಲಿ ಎಣ್ಣೆ ಕಾಳು ಬೆಳೆಗಳಿಗೆ ಹೆಚ್ಚಿನ ಬೇಡಿಕೆ ಇದೆ. ವಿವಿಧ ಎಣ್ಣೆ ಕಾಳುಗಳನ್ನು ಬೆಳೆಯುವಂತಹ ವಾತಾವರಣವು ನಮ್ಮ ದೇಶದಲ್ಲಿದೆ. ಅಂತಹ ಮಣ್ಣು ಕೂಡ ಇದೆ. ಇಂತಹ ವಿಷಯಗಳನ್ನು ರೈತರಿಗೆ ತಿಳಿಸಿ ಲಾಭದಾಯಕ ಎಣ್ಣೆ ಕಾಳುಗಳ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹ ನೀಡಬೇಕು ಎಂದರು.
ಯಾವುದೇ ಬೆಳೆಗಳನ್ನು ಗುಣಮಟ್ಟದ ರೀತಿಯಲ್ಲಿ ಬೆಳೆದರೆ ಅದಕ್ಕೆ ಬೇಡಿಕೆಯು ಹೆಚ್ಚಿರುತ್ತದೆ. ಒಣ ಬೇಸಾಯ ಇಲ್ಲವೇ ನೀರಾವರಿಯಲ್ಲಿ ಕೂಡ ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆಯಲು ಅವಕಾಶವಿದೆ. ಈ ದೃಷ್ಟಿಕೋನವಿಟ್ಟುಕೊಂಡು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೆಲಸ ಮಾಡಬೇಕಿದೆ. ರೈತರ ಆದಾಯವು ದ್ವಿಗುಣವಾಗಬೇಕು ಎಂದರೆ ನಾವು ಅವರಿಗೆ ಒಳ್ಳೆಯ ಮಾರುಕಟ್ಟೆ ಕಲ್ಪಿಸಬೇಕು. ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಚಿಂತನ ಮಂಥನ ನಡೆಸಿ ರೈತರಿಗೆ ಸಹಾಯ ಮಾಡಬೇಕು. ಲಾಭದಾಯಕ ಬೆಳೆ ತೆಗೆಯುವ ಮತ್ತು ಮಾರುಕಟ್ಟೆಯ ಬಗ್ಗೆ ರೈತರಿಗೆ ಹೆಚ್ಚಿನ ಅರಿವು ಮೂಡಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಮಾತನಾಡಿ, ಒಂದು ಜಿಲ್ಲೆ ಒಂದು ಬೆಳೆ ಯೋಜನೆಗೆ ಬೀದರ ಜಿಲ್ಲೆಯಿಂದ ಹಸಿ ಶುಂಠಿ ಆಯ್ಕೆಯಾಗಿದೆ. ಜಿಲ್ಲೆಯಲ್ಲಿ ತುಂಬಾ ಬೇಡಿಕೆ ಇರುವ ಬೆಳೆಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅವರಿಗೆ ಸಾಲ ಸೌಲಭ್ಯ ಒದಗಿಸಲು ಕೂಡ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ನಿಗಮ ಮಂಡಳಿಯ ಅಧ್ಯಕ್ಷರಾದ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಪಂಚಾಯತ್ ಸಿಇಓ ಜಹೀರಾ ನಸೀಂ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಎಂ.ಬ್ಯಾಕೋಡ್ ಹಾಗೂ ಇತರರು ಇದ್ದರು.