ಹೊಸಪೇಟೆ (ವಿಜಯನಗರ): ಪಶುಸಂಗೋಪನಾ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇದ್ದು,ಅವುಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ತಿಳಿಸಿದರು.
ನಗರದ ಮುನಿಸಿಪಾಲಿಟಿ ಮೈದಾನದ ಒಳಕ್ರೀಡಾಂಗಣ ಸಭಾಂಗಣದಲ್ಲಿ ಮಂಗಳವಾರ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.
ಅನೇಕ ವರ್ಷಗಳಿಂದ ಶೇ.50ರಷ್ಟು ಹುದ್ದೆಗಳು ಖಾಲಿ ಇದ್ದು,ಅವುಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಮತ್ತು ಹಣಕಾಸು ಇಲಾಖೆಯೊಂದಿಗೆ ಸಮಾಲೋಚಿಸಲಾಗುವುದು ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕ ಅಡಿ 83 ಪಶುವೈದ್ಯರನ್ನು ನೇರನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 32 ಪಶುವೈದ್ಯಕೀಯ ಪರೀಕ್ಷಕರು ಮತ್ತು 27 ಪಶುವೈದ್ಯಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದ ಅವರು ಇಲಾಖೆಯಲ್ಲಿ ಕಳೆದ 12 ವರ್ಷಗಳಿಂದ ಬಡ್ತಿ ಸಮಸ್ಯೆ ಎದುರಿಸುತ್ತಿದ್ದ ಅನೇಕರಿಗೆ ಸಹಾಯಕ ನಿರ್ದೇಶಕ,ಉಪನಿರ್ದೇಶಕ ಮತ್ತು ಜಂಟಿ ನಿರ್ದೇಶಕ ಹುದ್ದೆಗಳಿಗೆ ಬಡ್ತಿ ನೀಡಲಾಗಿದೆ ಎಂದರು.
ಪಶುಮೇಳದಂತೆಯೇ ಎಲ್ಲ ತಳಿಗಳ ಪಶುಗಳು ನೋಡುವುದಕ್ಕೆ ಲಭ್ಯವಾಗುವ ಪಶುಲೋಕವನ್ನು 100 ಎಕರೆ ಪ್ರದೇಶದಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ. ಗೋಮಾತೆ ಕಸಾಯಿಖಾನೆಗೆ ಹೋಗಬಾರದು ಎನ್ನುವ ಸದುದ್ದೇಶದಿಂದ ಹೊಸ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ತಂದು ಕಾನೂನು ಬಿಗಿಗೊಳಿಸಲಾಗಿದೆ.
ಮೂರು ಜನ ಮುಸ್ಲಿಂ ಬಾಂಧವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ ಎಂದರು.
ನಾನು ಅಧಿಕಾರಕ್ಕೆ ಬಂದಾಗಿನಿಂದ ಗೋಹತ್ಯೆ ನಿಷೇಧ ಕಾಯ್ದೆ, ಪ್ರತಿ ಜಿಲ್ಲೆಗೊಂದು ಗೋಶಾಲೆ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ರಚನೆ, ಪಶುಸಂಜೀವಿನಿ ಅಂಬ್ಯುಲೆನ್ಸ್, ಬೆಂಗಳೂರಿನಲ್ಲಿ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಆರಂಭ, ಸಿಬ್ಬಂದಿ ಬಡ್ತಿಗೆ ಕ್ರಮ, ಪ್ರಾಣಿ ಕಲ್ಯಾಣ ಸಹಾಯವಾಣಿ, ಪಶುಲೋಕ, ಅಮೃತ ಸಿರಿ, ಅಮೃತ ಧಾರೆ ಯೋಜನೆಗಳನ್ನು ಜಾರಿಗೆ ತರಲಾಗಿದೆ ಮತ್ತು ದೇಶಿ ತಳಿ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಸಹಾಯಕ ಆಯುಕ್ತ ಸಿದ್ದರಾಮೇಶ್ವರ, ಉಪನಿರ್ದೇಶಕ ಪರಮೇಶ್ವರ ನಾಯಕ್ ಸೇರಿದಂತೆ ಇಲಾಖೆಯ ಸಹಾಯಕ ನಿರ್ದೇಶಕರುಗಳು ಮತ್ತು ಪಶುವೈದ್ಯರು ಇದ್ದರು.