ಹಾಸನ : ಕೋವಿಡ್-19 ಸೋಂಕಿತರ ಸಾವಿನ ಪ್ರಮಾಣ ನಿಯಂತ್ರಣಕ್ಕೆ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್-19 ಕುರಿತು ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೋವಿಡ್ ಪರೀಕ್ಷೆಗಳ ನಿಗಧಿತ ಗುರಿ ಸಾಧಿಸಲು ಸೋಂಕಿತರ ಕುಟುಂಬದವರು, ಐ.ಎಲ್.ಐ. ಮತ್ತು ಸಾರಿ ಪ್ರಕರಣಗಳು ಹಾಗೂ ಬಸ್ ನಿರ್ವಾಹಕರುಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದರು.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಾಗೂ ಕೋವಿಡ್ನಿಂದ ಮೃತಪಟ್ವರ ಬಗ್ಗೆ ಪ್ರತಿದಿನ ವರದಿ ನೀಡುವಂತೆ ಅಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯವರು ಸೂಚಿಸಿದ್ದಾರೆ.
ಹಲವಾರು ಜಿಲ್ಲೆಗಳಲ್ಲಿ ರ್ಯಾಟ್ ಪರೀಕ್ಷೆಗಳನ್ನು ನಿಗಧಿತ ಗುರಿಗಿಂತ ಹೆಚ್ಚಾಗಿ ಮಾಡುತ್ತಿದ್ದು, ಅದೇ ರೀತಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗಳಲ್ಲೂ ಶೇ. 100 ರಷ್ಟು ಗುರಿ ಸಾಧಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಟಿ.ಎಂ. ವಿಜಯ್ ಭಾಸ್ಕರ್ ಅವರು ತಿಳಿಸಿದರು.
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿದೆ ಹಾಗಾಗಿ ಸರ್ಕಾರದ ನಿರ್ದೇಶನದಂತೆ ನಿಯಮ ಉಲ್ಲಂಘಿಸಿದವರ ವಿರುದ್ಧ ಹೆಚ್ಚಿನ ದಂಡ ವಿಧಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಹೋಂ ಕ್ವಾರಂಟೈನ್ ನಲ್ಲಿರುವ ಸೋಂಕಿತರು ಅನಾವಶ್ಯಕವಾಗಿ ಓಡಾಡಿದರೆ ತೊಂದರೆಯಾಗುತ್ತದೆ ಹಾಗಾಗಿ ಸೋಂಕಿತರ ಮನೆಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಶೇ. 100 ರಷ್ಟು ಭೇಟಿ ನೀಡಿ ವರದಿ ನೀಡಬೇಕು ಮತ್ತು ಕರೆ ಮಾಡಿ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯವರು ಸೂಚನೆ ನೀಡಿದರು.
ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಬಗ್ಗೆ ಮಾಹಿತಿ ನೀಡಲು ತಡಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ದಂಡ ವಿಧಿಸುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಟಿ.ಎಂ. ವಿಜಯ್ ಭಾಸ್ಕರ್ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.
ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ, ಔಷಧಗಳು, ಸಲಕರಣೆಗಳು ಹಾಗೂ ಹಣದ ಕೊರತೆ ಇದ್ದರೆ ಮಾಹಿತಿ ನೀಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ, ಕೋವಿಡ್-19 ಸೋಂಕು ತಡೆಗಟ್ಟುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಸಂಪೂರ್ಣ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಉಪ ವಿಭಾಗಾಧಿಕಾರಿ ಡಾ|| ನವೀನ್ ಭಟ್, ಹಿಮ್ಸ್ ನಿರ್ದೇಶಕರಾದ ಡಾ|| ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್, ಜಿಲ್ಲಾ ಆಯುಷ್ ಅಧಿಕಾರಿ ವೀಣ ಲತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಹಿರಣ್ಣಯ್ಯ ಹಾಗೂ ಮತ್ತಿತರರು ಹಾಜರಿದ್ದರು.