ಭಟ್ಕಳ: ತಾಲೂಕಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಟ್ಟದ ಇಲಾಖಾ ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಟ್ಟಿಹಕ್ಕಲ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಭಾರತಿ ವೆಂಕಟರಮಣ ದೇವಡಿಗ ಈಕೆಯು 600 ಮೀ., 400 ಮೀ., ಓಟದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಯಕ್ತಿಕ ವೀರಾಗ್ರಣಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾಳೆ.
ಕುಮಾರ ನಾರಾಯಣ ನಾಯ್ಕ ಎತ್ತರ ಜಿಗಿತದಲ್ಲಿ ಪ್ರಥಮ, ರಾಧಿಕಾ ರಾಮಚಂದ್ರ ದೇವಡಿಗ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಮಾಲತಿ ಮೊಗೇರ, ದೈಹಿಕ ಶಿಕ್ಷಣ ಶಿಕ್ಷಕ ಅರುಣ ನಾಯಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗರಾಜ ಕೋಡಿಯಾ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ.