77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಮಹಾನಗರ ಪೊಲೀಸ್ ಆಯುಕ್ತರು
ಧಾರವಾಡ : ಜಿಲ್ಲಾಡಳಿತದಿಂದ ಆ.15 ರಂದು ಆರ್ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಿರುವ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಇಂದು (ಆ.14) ಮಧ್ಯಾಹ್ನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸ್ವಾತಂತ್ರ್ಯ ದಿನೋತ್ಸವಕ್ಕೆ ಆಗಮಿಸುವ ಗಣ್ಯರಿಗೆ, ಅತಿಥಿಗಳಿಗೆ, ಅಧಿಕಾರಿಗಳಿಗೆ, ಇಲಾಖಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಮತ್ತು ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಸೂಚಿಸಿದರು.
ಪ್ರವೇಶದ್ವಾರ, ಅತಿಥಿ, ಗಣ್ಯರ ಪ್ರವೇಶ ಹಾಗೂ ಆಸನ ವ್ಯವಸ್ಥೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಶಾಂತ, ಸುವ್ಯವಸ್ಥಿತವಾಗಿ ಕಾರ್ಯಕ್ರಮ ಆಲಿಸುವಂತೆ ಮಾಡಲು ಅಗತ್ಯ ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕ ಸುಕುಮಾರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾಂತ್ರ್ಯೋತ್ಸವದ ಆಚರಣೆಗೆ ಮಾಡಿರುವ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಉಪಪೊಲೀಸ್ ಆಯುಕ್ತರಾದ ಡಾ: ಗೋಪಾಲ ಬ್ಯಾಕೋಡ, ರಾಜೀವ.ಎಂ., ಉಪವಿಭಾಗಾಧಿಕಾರಿ ಅಶೋಕ ತೇಲಿ, ಸಹಾಯಕ ಪೊಲೀಸ್ ಆಯುಕ್ತರಾದ ವಿಜಯಕುಮಾರ ವಿ.ಟಿ., ಮುಕ್ತೇದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ಸಂಗಪ್ಪ ಗಾಬಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೆ.ಸಿ. ಭದ್ರಣ್ಣವರ, ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ, ಪೊಲೀಸ್ ಇನ್ಸ್ಪೆಕ್ಟರ್ ಶಂಕರಗೌಡ ಪಾಟೀಲ, ಸಂಚಾರಿ ಇನ್ಸ್ಪೆಕ್ಟರ್ ಮಲ್ಲನಗೌಡ ನಾಯ್ಕರ, ತಹಶೀಲ್ದಾರ ದೊಡ್ಡಪ್ಪ ಹೂಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ವಿವರ : ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಆ.15 ರಂದು ಬೆಳಿಗ್ಗೆ 8-30 ಗಂಟೆಗೆ ಧಾರವಾಡ ಸಕ್ರ್ಯೂಟ್ ಹೌಸ್ಗೆ ಆಗಮಿಸುವರು. ಸಚಿವರು 8-40 ಕ್ಕೆ ಕಾರ್ಗಿಲ್ ಸ್ಥೂಪಕ್ಕೆ, 8-45 ಗಂಟೆಗೆ ಡೆಪ್ಯೂಟಿ ಚೆನ್ನಬಸಪ್ಪ ಪ್ರತಿಮೆಗೆ ಹಾಗೂ 8-50ಕ್ಕೆ ಕೆ.ಜಿ. ಕುಂದಣಗಾರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು.
ನಂತರ ಸಚಿವರು ಬೆಳಿಗ್ಗೆ 9 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ, 77ನೇ ಸ್ವಾತಂತ್ರ್ಯೋತ್ಸವದ ರಾಷ್ಟ್ರೀಯ ಧ್ವಜಾರೋಹಣ ನೆರವೇರಿಸುವರು. 9-10ಕ್ಕೆ ವಿವಿಧ ದಳಗಳ ವೀಕ್ಷಣೆ ಮಾಡುವರು ಮತ್ತು 9-15 ಕ್ಕೆ ಸಚಿವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡುವರು. 9-25 ಕ್ಕೆ ವಿವಿಧ ದಳಗಳಿಂದ ಅವರು ಗೌರವ ರಕ್ಷೆ ಸ್ವೀಕರಿಸುವರು.
ನಂತರ ಸಚಿವರು 9-35 ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂಟು ಜನ ಸಾಧಕರಿಗೆ ಸನ್ಮಾನಿಸುವರು. ಹಾಗೂ ಎಬಿಎಆರ್ಕೆ ಯೋಜನೆಯಲ್ಲಿ ಆರೋಗ್ಯ ಇಲಾಖೆಯಿಂದ ಸಾಧನೆ ಮಾಡಿದ ಎರಡು ವೈದ್ಯಕೀಯ ಸಂಸ್ಥೆಗಳಿಗೆ ಸನ್ಮಾನಿಸುವರು.
ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವರು ಬಿಡುಗಡೆ ಮಾಡುವರು.
ವಿಶೇಷಚೇತನರಾದ ಐದು ಜನ ಫಲಾನುಭವಿಗಳಿಗೆ ತ್ರಿಚಕ್ರವಾಹನ ಹಾಗೂ ಲ್ಯಾಪಟಾಪ್ ವಿತರಿಸುವರು.
9-45 ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಮಲ್ಲಕಂಬ ಪ್ರದರ್ಶನ ವೀಕ್ಷಿಸುವರು.
ಸಂಜೆ 5-30 ಕ್ಕೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.