ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಮೃತಪಟ್ಟಿರುವ 40 ಮೀನುಗಾರ ಕುಟುಂಬಕ್ಕೆ ಸಂಕಷ್ಟ ಪರಿಹಾರ ನಿಧಿಯಿಂದ ನೀಡಬೇಕಾದ ಪರಿಹಾರವನ್ನು ಅಧಿಕಾರಿಗಳು ವಿತರಿಸಿಲ್ಲ. ಸರ್ಕಾರದಿಂದ ಪರಿಹಾರದ ಹಣವೂ ಬಂದಿಲ್ಲ ಎಂದು ಅಧಿಕಾರಿಗಳು ಉತ್ತರಿಸಿದ್ದಾರೆ. ಇದಕ್ಕೆ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಮಂಕಾಳ ವೈದ್ಯ ಅವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಬುಧವಾರ ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ತಮ್ಮ ಮೀನುಗಾರಿಕೆ ಅಧಿಕಾರಿಗಳ ಬಳಿ ಮಾಹಿತಿ ಪಡೆದುಕೊಂಡರು.
ಕಳೆದ ಅಗಸ್ಟ್ ತಿಂಗಳಿಂದ ಮೀನುಗಾರರಿಗೆ ಸಿಗಬೇಕಾದ ಸೀಮೆಎಣ್ಣೆ ಸರಿಯಾಗಿ ಸಿಗುತ್ತಿಲ್ಲ ಎಂಬ ದೂರಿದೆ. ಈ ಬಗ್ಗೆ ಮೀನುಗಾರಿಕೆ ಮತ್ತು ಆಹಾರ ಇಲಾಖೆ ಅಧಿಕಾರಿಗಳಿಂದ ಸಮಂಜಸ ಉತ್ತರ ಸಿಗದಿರುವುದಕ್ಕೆ ಖೇದ ವ್ಯಕ್ತಪಡಿಸಿದರು.
ಇದರ ಜೊತೆಗೆ ಜಿಲ್ಲಾಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಅಧಿಕಾರಿಗಳಿಂದ ಮಾಹಿತಿ ಪಡೆದು ವೈದ್ಯಕೀ ಕಾಲೇಜನ್ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡಲು ಯೋಚಿಸಿ. ಅಗತ್ಯ ಸಹಕಾರ ಸರ್ಕಾರದಿಂದ ನೀಡುವುದಾಗಿ ಸಚಿವ ಮಂಕಾಳ ವೈದ್ಯ ಹೇಳಿದರು.
ಎಲ್ಲಾ ಅಧಿಕಾರಿಗಳು ಬಡ ಜನರಿಗೆ ಸ್ಪಂದಿಸಿ ಕೆಲಸ ಮಾಡಿ. ಕೆಲಸ ಮಾಡಲು ಮನಸಿಲ್ಲದಿದ್ದರೆ ನಾನೇ ವರ್ಗಾವಣೆ ಮಾಡಿಸಿಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ವಿಷ್ಣುವರ್ಧನ್, ಜಿ.ಪಂ ಸಿಇಓ ಈಶ್ವರ್ ಉಪಸ್ಥಿತರಿದ್ದರು.