ಬೆಂಗಳೂರು: ಇನ್ನೂ ತಲುಪದ ದಿಲ್ಲಿ ಸಂದೇಶ ಮುಂದುವರಿದ ಗೊಂದಲ: ಸಚಿವ ಸಂಪುಟ ರಚನೆ

Source: VB | By S O News | Published on 2nd August 2021, 1:51 PM | State News |

ಬೆಂಗಳೂರು: ಸಚಿವ ಸಂಪುಟ ರಚನೆ ಸಂಬಂಧ ಆ.2ರೊಳಗೆ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇದೆ. ಹೈಕಮಾಂಡ್‌ನಿಂದ ಸೂಚನೆ ಬಂದ ಕೂಡಲೇ ಸಚಿವ ಸಂಪುಟ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ಆರ್.ಟಿ. ನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ಸಂಬಂಧ ಹೈಕಮಾಂಡ್ ಸಂದೇಶವನ್ನು ಎದುರು ನೋಡಲಾಗುತ್ತಿದೆ. ವರಿಷ್ಠರು ಸೂಚನೆ ನೀಡುತ್ತಿದ್ದಂತೆ ಸಂಪುಟ ರಚನೆ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಯಡಿಯೂರಪ್ಪ ಬಳಿ ಚರ್ಚೆ: ಸಿಎಂ ನಿವಾಸಕ್ಕೆ ಸಚಿವಾಕಾಂಕ್ಷಿಗಳು ಆಗಮಿಸಿದರೆ, ಮುಖ್ಯಮಂತ್ರಿ ಬೊಮ್ಮಾಯಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಕುತೂಹಲ ಮೂಡಿಸಿದರು.

ಈ ಮೊದಲು ದಿಲ್ಲಿಗೆ ತೆರಳುವ ಮುನ್ನ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಬೊಮ್ಮಾಯಿ ದಿಲ್ಲಿಯಿಂದ ವಾಪಸಾದ ಬಳಿಕ ಮತ್ತೆ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಸಂಪುಟ ರಚನೆ ಕುರಿತಂತೆ ಹೈಕಮಾಂಡ್ ನೀಡಿರುವ ಸೂಚನೆಗಳ ಬಗ್ಗೆ ಬಿಎಸ್ ವೈ ಜೊತೆ ಚರ್ಚೆ ನಡೆಸಿದ್ದು, ಯಾರಿಗೆಲ್ಲಾ ಅವಕಾಶ ನೀಡಬೇಕು, ಯಾರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಕುರಿತು ಗಂಭೀರ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಸಚಿವಾಕಾಂಕ್ಷಿ ಶಾಸಕರು ಹಾಗೂ ಹಿರಿಯ ಮುಖಂಡರು ಸಿಎಂ ನಿವಾಸಕ್ಕೆ ದೌಡಾಯಿಸುತ್ತಿದ್ದು, ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ವಿ.ಸೋಮಣ್ಣ, ಬಿ.ಸಿ.ಪಾಟೀಲ್ ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಮಹೇಶ್ ಕುಮಟಳ್ಳಿ, ಶಿವನಗೌಡ ನಾಯಕ್ ಸೇರಿ ಹಲವು ಮುಖಂಡರು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದರು. ಸಿಎಂ ಭೇಟಿ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ಸಂಪುಟ ರಚನೆ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿಲ್ಲ, ಖಾತೆ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ, ಅದೆಲ್ಲಾ ಬರಲಿ, ಬಂದಾಗ ನೋಡೋಣ ಎಂದರು. ಗೃಹ ಖಾತೆ ಹೊಂದಿದ್ದ ಬೊಮ್ಮಾಯಿ ಸಿಎಂ ಆಗಿದ್ದು ಈಗ ಗೃಹ ಖಾತೆಗೆ ಬೇಡಿಕೆ ಇಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅದರ ಬಗ್ಗೆ ಈಗ ನಾನೇನೂ ಹೇಳಲ್ಲ ಮುಂದೆ ನೋಡೋಣ ಎಂದರು.

ಬುಧವಾರ ನೂತನ ಸಚಿವರ ಪ್ರಮಾಣ ವಚನ?

ಬೆಂಗಳೂರು: ದಿಢೀರ್‌ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಚಿವ ಸಂಪುಟ ರಚನೆ ಸಂಬಂಧ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದು, ನಾಲ್ಕು ಮಂದಿ ಉಪಮುಖ್ಯಮಂತ್ರಿಗಳೊಂದಿಗೆ 15 ಮಂದಿ ಸಚಿವರ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

ರವಿವಾರ ಸಂಜೆ ದಿಲ್ಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ ಅವರು, 21 ಮಂದಿ ಸಚಿವರ ಪಟ್ಟಿಯನ್ನು ವರಿಷ್ಠರ ಮುಂದಿಟ್ಟಿದ್ದರು. ಆ ಪೈಕಿ ನಾಲ್ವರು ಉಪಮುಖ್ಯಮಂತ್ರಿಗಳು ಸೇರಿದಂತೆ 15 ಮಂದಿ ಸಚಿವರ ಮೊದಲ ಪಟ್ಟಿಗೆ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದೆ.

ಬುಧವಾರದ ವೇಳೆಗೆ ನೂತನ ಸಚಿವ ಸಂಪುಟ ರಚನೆ ಮಾಡುವ ಇರಾದೆಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದಿಲ್ಲಿಗೆ ತೆರಳಿದ್ದು, ಸೋಮವಾರ ಬೆಂಗಳೂರಿಗೆ ಹಿಂದಿರುಗಲಿದ್ದಾರೆಂದು ಗೊತ್ತಾಗಿದೆ.

ರವಿವಾರ ರಾತ್ರಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವರಿಷ್ಠರನ್ನು ಭೇಟಿ ಮಾಡಲಿದ್ದು, ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವವರ ಪಟ್ಟಿಯನ್ನು ಅಖೈರುಗೊಳಿಸಿಕೊಂಡು ರಾಜ್ಯಕ್ಕೆ ಮರಳಲಿದ್ದಾರೆಂದು ಮೂಲಗಳು ತಿಳಿಸಿವೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...