ಕೋಲಾರ: ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಯಾವುದೇ ತೊಂದರೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಾದಸಿ. ಸತ್ಯಭಾಮ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬರ ಪರಿಸ್ಥಿತಿ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದ ಕೋಲಾರ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿದೆ. ಕುಡಿಯುವ ನೀರು, ಮೇವು ಸಂಬಂಧ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲರೂ ಒಟ್ಟುಗೂಡಿ ಜಿಲ್ಲೆಯ ಬರ ಪರಿಸ್ಥಿತಿಯನ್ನು ಎದುರಿಸಿ ಕುಡಿಯುವ ನೀರನ್ನು ಒದಗಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 746 ಎಂ.ಎಂ ವಾಡಿಕೆ ಮಳೆ ಆಗಬೇಕು. ಇದು ಸಕಾಲದಲ್ಲಿ ಆದಾಗ ಮಾತ್ರ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತದೆ. ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡು ನೀರಿನ ಸಂಗ್ರಹಣೆ ಮಾಡಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಹೆಚ್ಚು ನೀರಿನ ಕೊರತೆ ಉಂಟಾಗುತ್ತದೆ. ಕಳೆದ ವರ್ಷ 72 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ನೀರನ್ನು ಪೂರೈಸಲಾಗಿತ್ತು. ತಿಂಗಳಿಗೆ ಪ್ರತಿ ಬೋರ್ವೆಲ್ಗೆ 18 ಸಾವಿರ ರೂಪಾಯಿ ಬಾಡಿಗೆ ನೀಡಲಾಗಿತ್ತು. ಈ ಬಾರಿಯು ನೀರಿನ ಕೊರತೆ ಇರುವ ಕಡೆ ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆ ಪಡೆದು ಜನರಿಗೆ ನೀರನ್ನು ಪೂರೈಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಒಂದು ಸಾವಿರ ಅಡಿಗಿಂತ ಕಡಿಮೆ ಇದ್ದು ಬತ್ತಿ ಹೋಗಿರುವ ಬೋರ್ವೆಲ್ಗಳನ್ನು ಮರುಕೊರೆಸಿ, ಇದರಿಂದ ನೀರು ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಕುಡಿಯುವ ನೀರಿನ ಪೂರೈಕೆಗೆ ಅನುದಾನ ಕೊರತೆ ಇಲ್ಲ ಆದರೆ ಅದರ ಸದ್ಬಳಕೆ ಆಗಬೇಕು. ಬೋರ್ವೆಲ್ ಮತ್ತು ಟ್ಯಾಂಕರ್ ಮೂಲಕ ನೀಡುವ ನೀರಿನ ಫ್ಲೋರೈಡ್ ಅಂಶ ಹಾಗೂ ಶುದ್ಧತೆಯನ್ನು ಪರಿಶೀಲಿಸಿ ನೀಡಬೇಕು. ಟ್ಯಾಂಕರ್ಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಅಳವಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಸೋಮಶೇಖರ್, ಜಿಲ್ಲೆಯ ತಹಶೀಲ್ದಾರ್ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು, ನಗರಸಭೆ ಪೌರಾಯುಕ್ತರು ಮತ್ತು ಪುರಸಭೆಯ ಮುಖ್ಯಾಧಿಕಾರಿಗಳು, ಬೆಸ್ಕಾಂ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ