ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರು ಹರಿಯುತ್ತಿದ್ದು ಸಾವಿರಾರು ಲೀಟರ್ ನೀರು ವ್ಯರ್ಥವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ಜಾಲಿ ಪಪಂ ವ್ಯಾಪ್ತಿಯಲ್ಲಿ ಈಗಾಗಲೇ ತೀವ್ರ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಸಾವಿರಾರು ಲೀಟರ್ ನೀರು ಹರಿದು ಚರಂಡಿಗೆ ಸೇರುತ್ತಿದೆ ಎಂದು ಸ್ಥಳಿಯ ನಿವಾಸಿಗರು ಆತಂಕ ವ್ಯಕ್ತಪಡಿಸಿದ್ದಾರೆ. ನೀರು ನಷ್ಟವಾಗಿರುವ ಬಗ್ಗೆ ಬೆಳಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಸಂಜೆ 4 ಗಂಟೆಯ ನಂತರವೂ ಸೋರಿಕೆ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಜಾಲಿ ಪಪಂ ಮುಖ್ಯಾಧಿಕಾರಿ, ಕುಡಿಯುವ ನೀರಿನ ಪೈಪ್ ಲೈನ್ ಕಟ್ಟಾಗಿದ್ದು ಇದರಿಂದಾಗಿ ನೀರು ಹರಿಯುತ್ತಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದ್ದು, ಈಗಾಗಲೇ ಪೈಪ್ನಲ್ಲಿ ಸಂಗ್ರಹಿಸಲ್ಪಟ್ಟಿರುವ ನೀರು ಪೈಪ್ ಖಾಲಿಯಾಗುವವರೆಗೂ ಅದು ಹರಿಯುತ್ತಲೇ ಇರುತ್ತದೆ ಎಂದಿದ್ದಾರೆ.