ಭಟ್ಕಳದಲ್ಲಿ ಮೂರರಿಂದ ಆರಕ್ಕೇರಿದ ಕೊರೋನಾ ಸೋಂಕು; ಒಂದೇ ದಿನದಲ್ಲಿ ಮೂರು ಪ್ರಕರಣ ಪತ್ತೆ

Source: sonews | By Staff Correspondent | Published on 28th March 2020, 2:30 PM | Coastal News | Don't Miss |

*’ದೇವರೇ ಕಾಪಾಡು” ಎನ್ನುತ್ತಿರುವ ಭಟ್ಕಳಿಗರು

ಭಟ್ಕಳ: ಶನಿವಾರದಂದು ಭಟ್ಕಳದಲ್ಲಿ  ಮೂರು ಹೊಸ ಕೊರೋನಾ ಸೋಂಕಿತರು ದೃಢಪಟ್ಟಿದ್ದಾಗಿ ವರದಿಯಾಗಿದ್ದು ಇದರಿಂದಾಗಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಮೂರ ರಿಂದ ಆರಕ್ಕೇರಿದಂತಾಗಿದ್ದು ಮಂಗಳೂರಿನಲ್ಲಿ ಭಟ್ಕಳ ಮೂಲದ ವ್ಯಕ್ತಿಯು ಕೊರೋನಾ ಪೀಡಿತನಾಗಿ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಏಳು ಮಂದಿಗೆ ಸೋಂಕು ದೃಢಪಟ್ಟಂತಾಗಿದೆ. ಹೊಸರ ಮೂರು ಪ್ರಕರಣಗಳ ಕುರಿತಂತೆ ಜಿಲ್ಲಾಧಿಕಾರಿಗಳು ಇನ್ನಷ್ಟೇ ಅಧಿಕೃತವಾಗಿ ಘೋಷಿಸಬೇಕಿದೆ.

ದುಬೈನಿಂದ ಬಂದಿದ್ದ 65 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಈ ವ್ಯಕ್ತಿಯ ಕುಟುಂಬದವರಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ.

ಈತನ 55 ವರ್ಷದ ಪತ್ನಿ , 22 ಹಾಗೂ 28 ವರ್ಷ ಪುತ್ರಿಯರಿಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟಾರೆ ಈಗ ಭಟ್ಕಳ ಮೂಲದ ಏಳು (6+1) ಜನರಲ್ಲಿ ಸೋಂಕು ಇರುವುದು ದೃಢಪಟ್ಟಂತಾಗಿದೆ. ಸೋಂಕಿತ ಎಲ್ಲರನ್ನೂ ಕಾರವಾರದ ಪತಂಜಲಿ ನೌಕಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಮೊದಲು ದೃಢಪಟ್ಟವರು

1). ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಮಾರ್ಚ್ 19ರಂದು ಸ್ಪೈಸ್ ಜೆಟ್ ವಿಮಾನದ ಮೂಲಕ ಬೆಳಗ್ಗೆ 5.45ಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಪರೀಕ್ಷೆಗೊಳಪಡಿಸಿದಾಗ ವೈರಸ್ ಲಕ್ಷಣಗಳನ್ನು ಕಾಣಿಸಿಕೊಂಡಿದ್ದು, ನೇರವಾಗಿ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

2). 40 ವರ್ಷದ ಭಟ್ಕಳ ಮೂಲದ ವ್ಯಕ್ತಿ ದುಬೈನಿಂದ ವಿಮಾನದಲ್ಲಿ ಬಂದು 21ಕ್ಕೆ ಮಂಗಳೂರಿನಲ್ಲಿ ಬೆಳಿಗ್ಗೆ 6.30ಕ್ಕೆ ಇಳಿದಿದ್ದರು. ಅವರ ಸಂಬಂಧಿಯೊಬ್ಬರ ಕಾರಿನಲ್ಲಿ ಭಟ್ಕಳಕ್ಕೆ ಬಂದಿದ್ದ ಅವರು, ಮಧ್ಯಾಹ್ನ ತಾವೇ ಸ್ವಯಂಪ್ರೇರಿತವಾಗಿ ಭಟ್ಕಳ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಲಕ್ಷಣ ಕಂಡು ಬಂದಿದ್ದರಿಂದ ಗಂಟಲಿನ ದ್ರವವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಾ.23ರಂದು ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿತ್ತು.

3). ಎರಡನೇ ವ್ಯಕ್ತಿ, 65 ವರ್ಷದ ಭಟ್ಕಳ ಮೂಲದ ಇವರು, ದುಬೈನಿಂದ 19ಕ್ಕೆ ಮುಂಬೈಗೆ ಬಂದು ಇಳಿದಿದ್ದರು. ಅಲ್ಲಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಟ್ಕಳಕ್ಕೆ 20ಕ್ಕೆ ಬಂದು ಇಳಿದಿದ್ದರು. ರೈಲು ನಿಲ್ದಾಣದಿಂದ ಆಟೊ ರಿಕ್ಷಾದಲ್ಲಿ ಮಗನ ಜೊತೆಗೆ ಮನೆಗೆ ತೆರಳಿದ್ದರು‌. 21ರಂದು ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ಮಾಡಿದ್ದರು. ಆದರೆ, ಯಾವುದೇ ಲಕ್ಷಣ ಕಂಡು ಬಂದಿರಲಿಲ್ಲ. ಎರಡು ದಿನದ ಬಳಿಕ ಜ್ವರ ಸೇರಿದಂತೆ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆ ಅವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಭಟ್ಕಳ ತಾಲೂಕಾ ಆಸ್ಪತ್ರೆಗೆ ದಾಖಲಿಸಿದ್ದರು. ಅವರ ಗಂಟಲಿನ ದ್ರವವನ್ನೂ ಬೆಂಗಳೂರಿಗೆ ಕಳುಹಿಸಲಾಗಿತ್ತು. ಮಾ.23ರಂದು ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿತ್ತು.

4) ದುಬೈನಿಂದ 20ರಂದು ಗೋವಾ ದಾಬೋಲಿಯಮ್ ವಿಮಾನ ನಿಲ್ದಾಣಕ್ಕೆ ಬಂದಿಲಿಳಿದಿದ್ದ 22 ವರ್ಷದ ಯುವಕ, ಕಾರವಾರದ ಹೋಟೆಲ್ ವೊಂದರಲ್ಲಿ ಉಪಹಾರ ಸೇವಿಸಿ ಸಹೋದರನ ಜೊತೆಯಲ್ಲಿ ಭಟ್ಕಳಕ್ಕೆ ತೆರಳಿದ್ದ. ಈತನಲ್ಲೂ ಸೋಂಕು ಇರುವುದು ದೃಢಪಟ್ಟಿದೆ.

ಉತ್ತರಕನ್ನಡ ಜಿಲ್ಲಾಡಳಿತದ ವತಿಯಿಂದ ಈಗಾಗಲೇ ತರಕಾರಿ, ಹಣ್ಣು, ಕಿರಾಣಿ ವಸ್ತುಗಳನ್ನು ಮನೆಯ ಬಾಗಿಲಿಗೇ ಒದಗಿಸುವ ಸೇವೆಯನ್ನ ಪ್ರಾರಂಭಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಹಾಗೂ ಗ್ರಾಮೀಣ ಭಾಗದಲ್ಲಿ ಮೂರು ದಿನಕ್ಕೊಮ್ಮೆ ಅಗತ್ಯ ವಸ್ತುಗಳನ್ನ ಪೂರೈಸಲಾಗುತ್ತಿದೆ.

ಆದರೂ ಸಹ ಜನರು ವಿನಾಕಾರಣ ತಿರುಗಾಟ ನಡೆಸುತ್ತಿದ್ದು ಸೋಂಕು ನಿಯಂತ್ರಣಕ್ಕೆ ಅಡ್ಡಿ ಎನ್ನುವಂತಾಗಿದೆ. ಮುಖ್ಯ ರಸ್ತೆಗಳನ್ನ ಹೊರತುಪಡಿಸಿ ನಗರದ ಹೊರ ವಲಯದಲ್ಲಿಯೇ ಹೆಚ್ಚಿನದಾಗಿ ಜನರು ಓಡಾಟ ನಡೆಸುತ್ತಿದ್ದು ಪೊಲೀಸರು ಕಂಡುಬಂದಲ್ಲಿ ಬೈಕ್ ವಾಪಸ್ ತಿರುಗಿಸಿಕೊಂಡು ಹೋಗುವ ಕೆಲಸ ಮಾಡುತ್ತಿರುವುದು ಕಂಡುಬಂದಿದೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...