ಹಾಸನ : ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಕಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಾದ ಹೊಣೆಗಾರಿಕೆ ಎಲ್ಲಾ ಸರ್ಕಾರಿ ಸಂಸ್ಥೆಗಳ ಮೇಲಿದೆ ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಟಿ. ಕೃಷ್ಣೇಗೌಡ ಹೇಳಿದ್ದಾರೆ.
ನಗರದ ಎಂ.ಜಿ. ರಸ್ತೆಯಲ್ಲಿರುವ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಕಾಲ ಸಪ್ತಾಹ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಿ ಕೆಲಸಗಳು ಸದಾ ಪಾರದರ್ಶಕವಾಗಿರಬೇಕೆಂಬ ಕಾರಣಕ್ಕೆ ಈ ಸಕಾಲ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಜನ ಸಾಮಾನ್ಯರಿಗೆ ಸರ್ಕಾರದ ಯಾವುದೇ ಯೋಜನೆ ತಿಳಿಯುವುದು ಇದರಿಂದ ಸುಲಭವಾಗಿದೆ. ನಮ್ಮ ಶಿಕ್ಷಣ ಇಲಾಖೆಯಲ್ಲಿ ಸಕಾಲ ಅರ್ಜಿಗಳು ಬರುವುದು ಕಮ್ಮಿ, ಆದರೇ ಬರುವ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡುವುದು ನಮ್ಮ ಕರ್ತವ್ಯವಾಗಿದೆ. ಯಾವುದೇ ಅರ್ಜಿಗಳು ಬಂದರು ಅರ್ಜಿದಾರರು ಕೇಳಿರುವ ಮಾಹಿತಿಯನ್ನು ನಿಖರವಾಗಿ ಅವರಿಗೆ ನಿಗದಿತ ದಿನಾಂಕದೊಳಗೆ ಮಾಹಿತಿಯನ್ನು ನೀಡಬೇಕು ಎಂದರು.
ಸಕಾಲ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತೆ ಸರ್ಕಾರ ತಿಳಿಸಿದೆ. ಆದರೇ ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜಿಗೆ ವಿದ್ಯಾರ್ಥಿಗಳು ಬಾರದೆ ಇರುವುದರಿಂದ ಜಾಗೃತಿ ಜಾಥ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗೆಯೇ ಜನ ಸಾಮಾನ್ಯರಿಗೂ ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ, ಹಾಗಾಗಿ ಸಾಧ್ಯವಾದಷ್ಟು ಸಾಮಾಜಿಕ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಬೇಕಾಗಿದೆ. ಕಾಲೇಜು ಹಂತದಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಜರಿದ್ದರು.