ವೋಟರ್ ಐಡಿ ಅಕ್ರಮ ವಿತರಣೆ ಆರೋಪ; ಪುತ್ತೂರು ಜನಸೇವಾ ಕೇಂದ್ರದ ಮೇಲೆ ಎಸಿ ದಾಳಿ, ದಾಖಲೆಗಳ ವಶ
ಪುತ್ತೂರು: ರಾಜ್ಯದ ವಿವಿಧೆಡೆ ಮತದಾರ ಪಟ್ಟಿ ಪರಿಷ್ಕರಣೆ ಅಕ್ರಮದ ಆರೋಪ ಕೇಳಿಬಂದಿರುವಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೋಟರ್ ಐಡಿ ನೀಡಿಕೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
ಪುತ್ತೂರಿನಲ್ಲಿಯೂ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಕೇಂದ್ರಕ್ಕೆ ಬೀಗ ಹಾಕಿದ ಘಟನೆ ಸೋಮವಾರ ಮುಸ್ಸಂಜೆ ನಡೆದಿದೆ.
ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಮೇದಿನಿ ಜನ ಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಶೀ ಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು. ಪೊಲೀಸ್ ಬಂದೋಬಸ್ತ್ ನಲ್ಲಿ ತನಿಖೆ ನಡೆಸಲಾಯಿತು.
ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಮೇದಿನಿ ಜನ ಸೇವಾ ಕೇಂದ್ರಕ್ಕೆ ಬಂದು ವಿಷಯ ತಿಳಿಸಿದ್ದರು.ವೋಟರ್ ಐಡಿ ಮತ್ತೆ ದೊರಕಿಸುವ ಸಂಬಂಧ ಆನ್ ಲೈನ್ ಅರ್ಜಿ ಪ್ರಕ್ರಿಯೆ ನಡೆಸಿ ಕೇಂದ್ರದಲ್ಲೇ ಗುರುತಿನ ಚೀಟಿ ಮುದ್ರಿಸಿ ಕೊಡಲಾಗಿದೆ ಎಂದು ಆಪಾದಿಸಲಾಗಿದೆ. ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ಅವರು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ ತೆರಳಿ ಅದನ್ನು ತೋರಿಸಿದರು ಎನ್ನಲಾಗಿದೆ. ಅಧಿಕಾರಿಗಳು ಈ ಬಗ್ಗೆ ತಪಾಸಣೆ ನಡೆಸಿದಾಗ ಹೊರಗಿನ ಕೇಂದ್ರದಲ್ಲಿ ವೋಟರ್ ಐಡಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ತನಿಖೆ ಮಾಡಿದೆ.
'ನಾವು ಏನೂ ತಪ್ಪು ಮಾಡಿಲ್ಲ. ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟವೆಬ್ ಸೈಟ್ ತೆರೆದುಕೊಂಡ ಕಾರಣ ನಮ್ಮ ಸಿಬ್ಬಂದಿ ಲಾಗಿನ್ ಆಗಿ ಅರ್ಜಿ ಪ್ರಕ್ರಿಯೆ ನಡೆಸಿ ಕಾರ್ಡ್ ಮುದ್ರಿಸಿ ಕೊಟ್ಟಿದ್ದಾರೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕವಾಗಿ ಮಾಡಿ ತೋರಿಸಿದ್ದೇವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ. ಸರಕಾರಿ ಅಧಿಕಾರಿಗಳ, ಚುನಾವಣಾ ಆಯೋಗದ ಅಧಿಕಾರಿಗಳ ಸಹಿ ಪೋರ್ಜರಿ ಮಾಡಲು ನಮಗೆ ಸಾಧ್ಯವೇ? ನಾವು ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿಲ್ಲ ಎಂದು ಕೇಂದ್ರದ ಮಾಲಕಿ ಈ ಸಂದರ್ಭ ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಅಪರಾಧ ಮಾಡಿರುವುದು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ. ಬಾಹ್ಯ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿ ವಿತರಣೆ ಮಾಡುವ ಅಧಿಕಾರವನ್ನು ನಾವು ಯಾರಿಗೂ ಕೊಟ್ಟಿಲ್ಲ. ಆದರೂ ಈ ಕೇಂದ್ರದಲ್ಲಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಕಾರ್ಡ್ ವಶಪಡಿಸಿಕೊಂಡು ಕೇಂದ್ರಕ್ಕೆ ಬೀಗ ಹಾಕಿದ್ದೇವೆ. ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರು ತಿಳಿಸಿದ್ದಾರೆ.