ಲಖನೌ: ಕೋವಿಡ್ 19 ಸಾಂಕ್ರಾಮಿಕರ ರೋಗದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಸಿಬಿಎಸ್ಇ ಮತ್ತು ಐಸಿಎಸ್ಇ ಶಿಕ್ಷಣ ಪದ್ಧತಿಯ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರವೂ ರಾಜ್ಯ ಪರೀಕ್ಷಾ ಮಂಡಳಿ ನಡೆಸುವ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಪ್ರೌಢಶಿಕ್ಷಣ ಇಲಾಖೆಯ ಉಸ್ತುವಾರಿಯೂ ಆಗಿರುವ, ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹಾಜರಿದ್ದರು.
ವಾರ್ತಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನವನೀತ್ ಸೆಹಗಲ್ ಅವರು, ‘ರಾಜ್ಯ ಸರ್ಕಾರ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ‘ ಎಂದು ಖಚಿತಪಡಿಸಿದರು. ರಾಜ್ಯದಲ್ಲಿ ಸುಮಾರು 26 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಣಿಯಾಗಿದ್ದರು.
ರಾಜ್ಯ ಸರ್ಕಾರ ಕಳೆದ ತಿಂಗಳು 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿತ್ತು. ಸುಮಾರು 30 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಇಷ್ಟೂ ಮಂದಿ ವಿದ್ಯಾರ್ಥಿಗಳನ್ನು 11ನೇ ತರಗತಿಗೆ ಉತ್ತೀರ್ಣ ಮಾಡಲಾಗಿದೆ