ಕೋಲ್ಕತಾ: ಪಶ್ಚಿಮ ಬಂಗಾಳದ ಆಸನ್ಸೋಲ್ ನಲ್ಲಿ ಬುಧವಾರ ನಡೆದ ಹೊದಿಕೆಗಳನ್ನು ವಿತರಿಸುವ ಸಮಾರಂಭವೊಂದರಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಧಾರ್ಮಿಕ ಸಂಘಟನೆ 'ಶಿವ ಚರ್ಚೆ'ದ ಆಶ್ರಯದಲ್ಲಿ ಬಿಜೆಪಿ ಕೌನ್ಸಿಲರ್ ಚೈತಾಲಿ ತಿವಾರಿ ಏರ್ಪಡಿಸಿದ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ. ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಮತ್ತು ಶಾಸಕ ಜಿತೇಂದ್ರ ತಿವಾರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಧಿಕಾರಿ ಕಾರ್ಯಕ್ರಮದಿಂದ ಹೋದ ಬಳಿಕ ದುರಂತ ಸಂಭವಿಸಿದೆ.
ಈ ಸಮಾರಂಭಕ್ಕೆ ಅನುಮತಿ ಪಡೆದುಕೊಳ್ಳಲಾಗಿರಲಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಅನುಮತಿಯನ್ನು ಪೊಲೀಸರು ನಿರಾಕರಿಸಿದ್ದಾರೆ ಎಂದು ತಿವಾರಿ ಹೇಳಿದ್ದಾರೆ. ಪೊಲೀಸರಿಂದ ಅನುಮತಿ ಪಡೆಯದ ಹೊರತಾಗಿಯೂ ಕಾರ್ಯಕ್ರಮವನ್ನು ಏರ್ಪಡಿಸಿರುವುದಕ್ಕಾಗಿ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ಟೀಕಿಸಿದೆ.