ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯ ಮತ ಏಣಿಕೆ ಕಾರ್ಯವು ನವೆಂಬರ್ 2 ರಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಜರುಗಲಿದೆ.
ಮತ ಏಣಿಕೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಶುಕ್ರವಾರ ಮದ್ಯಾಹ್ನ ಕೃಷಿ ವಿಶ್ವವಿದ್ಯಾಲಯದ ರೈತ ಭವನದಲ್ಲಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ಚುನಾವಣಾ ಅಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತ ಏಣಿಕೆಯ ಕಾರ್ಯ ಹಾಗೂ ಮತ ಏಣಿಕಾ ಕೇಂದ್ರದಲ್ಲಿ ಕೈಗೊಂಡಿರುವ ಸಿದ್ಧತೆ, ಸುರಕ್ಷತಾ ಕ್ರಮಗಳ ಕುರಿತು ವಿವರಿಸಿದರು.
ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದರಿಂದ ಮತ ಏಣಿಕೆಗೆ ಅಗತ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸುವುದರೊಂದಿಗೆ ಹೆಚ್ಚುವರಿಯಾಗಿ ಸಿಬ್ಬಂದಿಗಳನ್ನು ಆಯ್ಕೆ ಮಾಡಿ ಅಗತ್ಯವಿದ್ದಲ್ಲಿ ಬಳಸಿಕೊಳ್ಳಲು ಅವರನ್ನು ಮೀಸಲು ( ರಿಸರ್ವ್) ಇಡಲಾಗಿದೆ.
ಮತ ಏಣಿಕೆಗೆ ಹೆಚ್ಚುವರಿ ಸಮಯ ತಗಲುವದರಿಂದ ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ನಿಯಮಗಳನ್ನು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲಿಸುವುದರೊಂದಿಗೆ ಕೊವೀಡ್-19 ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಚಾಚೂ ತಪ್ಪದೆ ಅನುಸರಿಸಬೇಕೆಂದು ಅವರು ತಿಳಿಸಿದರು.
ರಾಜ್ಯ ಮಟ್ಟದ ಮಾಸ್ಟರ್ ಟ್ರೆನರ್ ಆಗಿರುವ ಹಿರಿಯ ತರಬೇತಿದಾರ ಚೊರಗಸ್ತಿ, ಹಿರಿಯ ಕೆಎಎಸ್ ಅಧಿಕಾರಿ ಮಹ್ಮದ ಜುಬೇರ, ಹಾವೇರಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಫ್. ಯೋಗೆಶ್ವರ್ ಅವರು ಮತ ಏಣಿಕೆ ಕರ್ತವ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಿದರು.
ಕಾರ್ಯಾಗಾರದಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹಾವೇರಿ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಅಪರ ಪ್ರಾದೇಶಿಕ ಆಯುಕ್ತರಾದ ರಮೇಶ ಕಳಸದ, ನಜ್ಮಾ ಫೀರಜಾದೆ, ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಮಹಾನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ತಹಶಿಲ್ದಾರಾದ ಡಾ.ಸಂತೋಷ ಬಿರಾದಾರ, ನವೀನ ಹುಲ್ಲೂರು, ಅಶೋಕ ಶಿಗ್ಗಾಂವಿ ಸೇರಿದಂತೆ ಮತ ಏಣಿಕೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು,ಸಿಬ್ಬಂದಿಗಳು ಭಾಗವಹಿಸಿದ್ದರು.